ನವದೆಹಲಿ: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೀದಿ ನಾಯಿಗಳ ಸ್ಥಳಾಂತರದ ಬಗ್ಗೆ ಸುಪ್ರೀಂ ಕೋರ್ಟ್ ಇದೀಗ ಮಹತ್ವದ ಸೂಚನೆ ನೀಡಿದೆ. ದೇಶದ ಎಲ್ಲಾ ಆಸ್ಪತ್ರೆಗಳು, ಶಾಲಾ-ಕಾಲೇಜುಗಳು, ರೈಲ್ವೆ ನಿಲ್ದಾಣಗಳು ಹಾಗೂ ಬಸ್ ನಿಲ್ದಾಣಗಳ ಬಳಿ ಇರುವ ಬೀದಿ ನಾಯಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಸಂದೀಪ್ ಮೆಹ್ತಾ, ವಿಕ್ರಮ್ ನಾಥ್ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠ ಈ ಸೂಚನೆಯನ್ನು ಹೊರಡಿಸಿದ್ದು, ಸಂತಾನಹರಣ ಶಸ್ತ್ರಚಿಕಿತ್ಸೆಯ ನಂತರ ಕೂಡ ಶಾಲೆ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ನಾಯಿಗಳನ್ನು ಹಿಂತಿರುಗಿಸಬಾರದು. ಬದಲಿಗೆ ಬೀದಿ ನಾಯಿಗಳನ್ನು ಡಾಗ್ ಶೆಲ್ಟರ್ಗೆ ಹಾಕಬೇಕು ಎಂದು ಆದೇಶಿಸಿದೆ.

ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳಿಗೆ ಆಹಾರ ಹಾಕದಂತೆ ಸ್ಥಳೀಯ ಪಾಲಿಕೆ ಅಧಿಕಾರಿಗಳು ಗಮನಹರಿಸಬೇಕು. ಅಲ್ಲದೇ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಇತರ ರಸ್ತೆ ಬದಿಗಳಲ್ಲಿ ಮಲಗುವ, ತಿರುಗಾಡುವ ಬೀಡಾಡಿ ದನಗಳನ್ನು ಕೂಡ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಇನ್ನು ಬೀದಿ ನಾಯಿಗಳ ಸ್ಥಳಾಂತರ ವಿಚಾರದಲ್ಲಿ ಸ್ಥಳೀಯ ಆಡಳಿತವು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದಿರುವ ಕೋರ್ಟ್ ಯಾವುದೇ ಕಾರಣಕ್ಕೂ ಬೀದಿ ನಾಯಿಗಳನ್ನು ಹಿಡಿದ ಸ್ಥಳಕ್ಕೆ ಮತ್ತೆ ಬಿಡಬಾರದು ಎಂದು ಸ್ಪಷ್ಟಪಡಿಸಿದೆ.







