ಕಾವೇರಿ ವಿವಾದ ಹಿನ್ನೆಲೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ತಮಿಳುನಾಡಿಗೆ ಮತ್ತೆ ಮುಖಭಂಗವಾಗಿದೆ. ಪ್ರತಿದಿನ 24 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಆಗಸ್ಟ್ 25) ತಿರಸ್ಕರಿಸಿದೆ.
ಸೋಮವಾರ ಪ್ರಾಧಿಕಾರದ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ತಿಳಿಸಿದ ನಂತರ ನ್ಯಾಯಮೂರ್ತಿ ಬಿ.ಅ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ (ಸಿಡಬ್ಲ್ಯು ಎಂಎ) ಕರ್ನಾಟಕ ಬಿಡುಗಡೆ ಮಾಡಿದ ನೀರಿನ ಪ್ರಮಾಣದ ಬಗ್ಗೆ ವರದಿ ಕೇಳಿದೆ.
“ನಾವು ಕಾವೇರಿ ವಿವಾದ ವಿಚಾರದಲ್ಲಿ ಪರಿಣತಿಯನ್ನು ಹೊಂದಿಲ್ಲ. ಮುಂದಿನ ಹದಿನೈದು ದಿನಗಳ ಕಾಲ ನೀರು ಹರಿಸುವುದನ್ನು ನಿರ್ಧರಿಸಲು ಸೋಮವಾರ ಪ್ರಾಧಿಕಾರ ಸಭೆ ನಡೆಸುತ್ತಿದೆ” ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಸ್ಪಷ್ಟಪಡಿಸಿದ್ದಾರೆ.
“ನೀರು ಬಿಡಲು ನೀಡಿರುವ ನಿರ್ದೇಶನಗಳನ್ನು ಪಾಲಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಪ್ರಾಧಿಕಾರ ತನ್ನ ವರದಿಯನ್ನು ಸಲ್ಲಿಸುವುದು ಸೂಕ್ತ” ಎಂದು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಪಿ.ಕೆ.ಮಿಶ್ರಾ ಅವರನ್ನೊಳಗೊಂಡ ಪೀಠ ಹೇಳಿದೆ.
ಈ ವರ್ಷ ನೀರಿಗೆ ಸಂಕಷ್ಟವಿಲ್ಲ. ಹಾಗಾಗಿ ಪ್ರತಿದಿನ 24 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ಸರ್ಕಾರ ಕೇಳುತ್ತಿರುವುದು ಸರಿಯಲ್ಲ ಎಂದು ಕರ್ನಾಟಕ ಸರ್ಕಾರ ಕಾವೇರಿ ವಿವಾದ ವಿಚಾರದಲ್ಲಿ ಹೇಳಿದೆ