ವಿಧಾನಸಭೆ ಕಲಾಪದಲ್ಲಿ ಅಶಿಸ್ತು ವರ್ತನೆ ತೋರಿ ಅಮಾನತುಗೊಂಡಿರುವ ಹತ್ತು ಮಂದಿ ಬಿಜೆಪಿ ಶಾಸಕರು ಗುರುವಾರ ಕಲಾಪ ಬಹಿಷ್ಕರಿಸಿದ್ದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ನಡೆಗೆ ಆಕ್ರೋಶ ವ್ಯಕ್ತಡಿಸಿ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಆರ್.ಅಶೋಕ್, ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ, ಶಾಸಕರು, ಪರಿಷತ್ ಸದಸ್ಯರು ಪಾಲ್ಗೊಂಡಿದ್ದಾರೆ.
![](https://pratidhvani.com/wp-content/uploads/2023/07/ಗಾಧಿ-1024x576.jpeg)
ಬಿಜೆಪಿ ಶಾಸಕ ಆರ್. ಅಶೋಕ್ ಇದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಮಾನತುಗೊಂಡ, “ವಿಧಾನಸಭಾಧ್ಯಕ್ಷರು ಒಂದು ಪಕ್ಷದ ಪರವಾಗಿ ಕೆಲಸ ಮಾಡಬಾರದು. ಯು.ಟಿ ಖಾದರ್ ಅವರು ಕಲಾಪಕ್ಕೂ ಮುನ್ನ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೆ ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ನಾವು ಹೋರಾಟ ನಡೆಸಿ ನ್ಯಾಯ ಕೇಳಿದ್ದಕ್ಕೆ ನಮ್ಮನ್ನು ಅಮಾನತು ಮಾಡಿದ್ದಾರೆ. ವಿಧಾನಸಭಾಧ್ಯಕ್ಷರ ಈ ನಡೆ ಖಂಡಿಸಿ ನಾವು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದರು.
![](https://pratidhvani.com/wp-content/uploads/2023/07/ಬಿಜಾಪಿ-1024x576.jpeg)
ಬಿಜೆಪಿ ಶಾಸಕ ಅಶೋಕ್ ಅವರು ಯು.ಟಿ. ಖಾದರ್ ಅವರು ರಾಜ್ಯಪಾಲರ ಭೇಟಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, “ಸ್ಪೀಕರ್ ತಪ್ಪು ಮಾಡಿದ್ದಾರೆ. ಅದಕ್ಕಾಗಿ ಅವರು ರಾಜ್ಯಪಾಲರ ಬಳಿ ಹೋಗಿದ್ದಾರೆ. ಅದಕ್ಕಾಗಿ ಈಗ ವಿಧಾನಸಭಾಧ್ಯಕ್ಷರ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು ಬಳಿಕ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡುತ್ತೇವೆ” ಎಂದು ಎಂದು ತಿಳಿಸಿದರು.