ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರ ವೈಯಕ್ತಿಕ ಜೀವನದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಜಯ್ ಪತ್ನಿ ಸಂಗೀತಾ ಅವರು ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಹಿಂಪಡೆದಿದ್ದು, ನ್ಯಾಯಾಲಯ ಪ್ರಕರಣವನ್ನು ಮುಕ್ತಾಯಗೊಳಿಸಿದೆ.

ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಸಂಗೀತಾ ಅವರು, ವಿಚ್ಛೇದನ ಅರ್ಜಿಯನ್ನು ಮುಂದುವರಿಸಲು ಇಚ್ಛೆಯಿಲ್ಲ ಎಂದು ತಿಳಿಸಿದರು. ಇದನ್ನು ಪರಿಗಣಿಸಿದ ನ್ಯಾಯಾಲಯ ಪ್ರಕರಣವನ್ನು ಇತ್ಯರ್ಥಪಡಿಸಿದೆ.

ಸಂಗೀತಾ ಅವರು 2025ರ ಡಿಸೆಂಬರ್ನಲ್ಲಿ ವಿಜಯ್ ಅವರಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣ ತಮಿಳುನಾಡಿನ ರಾಜಕೀಯ ಮತ್ತು ಚಿತ್ರರಂಗದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಹಲವು ಬಾರಿ ವಿಚಾರಣೆಗೆ ದಿನಾಂಕ ನಿಗದಿಯಾದರೂ, ಇಬ್ಬರೂ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿರಲಿಲ್ಲ.

ಈಗ ಅರ್ಜಿ ಹಿಂಪಡೆಯುವ ಮೂಲಕ ವಿಜಯ್ ಮತ್ತು ಸಂಗೀತಾ ದಾಂಪತ್ಯದಲ್ಲಿ ಸೌಹಾರ್ದತೆ ಮೂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ, ಅರ್ಜಿ ಹಿಂಪಡೆಯಲು ನಿಖರವಾದ ಕಾರಣವನ್ನು ನ್ಯಾಯಾಲಯದಲ್ಲಿ ಬಹಿರಂಗಪಡಿಸಲಾಗಿಲ್ಲ. ವಿಜಯ್ ಮತ್ತು ಸಂಗೀತಾ ಅವರು 1999ರಲ್ಲಿ ವಿವಾಹವಾಗಿದ್ದು, ಅವರಿಗೆ ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ವಿಚ್ಛೇದನ ಅರ್ಜಿ ಸಲ್ಲಿಕೆಯಿಂದ ಸಾಕಷ್ಟು ಸುದ್ದಿಯಾಗಿದ್ದ ಈ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ.







