ಬೆಂಗಳೂರು: ವಿದ್ಯಾವಂತರಲ್ಲೇ ಜಾತಿ ವ್ಯವಸ್ಥೆ ಹಾಗೂ ಮೌಢ್ಯ ಮುಂದುವರಿಯುತ್ತಿರುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಶೂದ್ರ ಸೇವಾ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ವ್ಯವಸ್ಥೆಯ ಮೂಲಕ ಯಾರನ್ನೂ ಕೀಳಾಗಿ ಕಾಣಬಾರದು ಎಂದು ಹೇಳಿದರು.
ಚತುವರ್ಣ ವ್ಯವಸ್ಥೆಯನ್ನು ಮನುವಾದಿಗಳು ಉದ್ದೇಶಪೂರ್ವಕವಾಗಿ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದ ಸಿದ್ದರಾಮಯ್ಯ, ಜಾತಿ ವ್ಯವಸ್ಥೆ ನಿರ್ಮೂಲನೆಯಾಗಬೇಕಾದರೆ ಸಮಾನತೆಯ ಸಮಾಜ ನಿರ್ಮಾಣವಾಗಬೇಕು ಎಂದರು.ಶೂದ್ರ ವರ್ಗದವರು ಹಲವು ವರ್ಷಗಳ ಕಾಲ ಶಿಕ್ಷಣ ಮತ್ತು ಅವಕಾಶಗಳಿಂದ ವಂಚಿತರಾಗಿದ್ದರು. ಇಂತಹ ಸಂದರ್ಭದಲ್ಲಿ ಮೇಲ್ವರ್ಗದವರೊಂದಿಗೆ ಸ್ಪರ್ಧಿಸುವುದು ಸುಲಭವಾಗಿರಲಿಲ್ಲ. ಅಕ್ಷರ ವಂಚಿತರು ಹಾಗೂ ಶಿಕ್ಷಣ ಪಡೆದವರ ನಡುವಿನ ಅಂತರದಿಂದಾಗಿ ಸಾಮಾಜಿಕ ಅಸಮಾನತೆ ಮತ್ತಷ್ಟು ಹೆಚ್ಚಾಯಿತು ಎಂದು ಹೇಳಿದರು.

ನಮ್ಮಲ್ಲಿನ ಭಿನ್ನಾಭಿಪ್ರಾಯಗಳ ಪರಿಣಾಮ ಬ್ರಿಟಿಷರು ದೇಶವನ್ನು ಆಳುವಂತಾಯಿತು. ಹೀಗಾಗಿ ಎಲ್ಲ ವರ್ಗದವರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಂದಾಗಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.ಅಸಮಾನತೆ ನಿವಾರಿಸಿ ಸಮಸಮಾಜ ನಿರ್ಮಿಸುವುದು ಸಂವಿಧಾನದ ಆಶಯವಾಗಿದೆ. ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್ ಅವರ ಚಿಂತನೆಯೂ ಸಮಾನತೆಯ ಸಮಾಜ ನಿರ್ಮಾಣದತ್ತವೇ ಇತ್ತು ಎಂದು ಅವರು ಹೇಳಿದರು.
ಪಟ್ಟಭದ್ರ ಹಿತಾಸಕ್ತಿಗಳು ಸಮಾಜದ ಎಲ್ಲ ವರ್ಗಗಳು ಒಂದಾಗುವುದನ್ನು ತಡೆಯುತ್ತಿವೆ. ಜಾತಿ ವ್ಯವಸ್ಥೆ ನಿರ್ಮೂಲನೆಯಾಗಬೇಕಾದರೆ ವಿದ್ಯಾವಂತರು ವೈಜ್ಞಾನಿಕವಾಗಿ ಚಿಂತಿಸುವುದನ್ನು ಕಲಿಯಬೇಕು ಎಂದರು.ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ಬಂದರೂ ಅದು ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ವಿದ್ಯಾವಂತರಲ್ಲೂ ಬಹುಪಾಲು ಮಂದಿ ಈಗಲೂ ಮೌಢ್ಯ ಹಾಗೂ ಕಂದಾಚಾರಗಳನ್ನು ಪಾಲಿಸುತ್ತಿರುವುದು ಇದಕ್ಕೆ ಕಾರಣ ಎಂದು ಅವರು ಅಭಿಪ್ರಾಯಪಟ್ಟರು.ಇಂದಿನ ಪೀಳಿಗೆ ವೈಜ್ಞಾನಿಕ ಹಾಗೂ ವೈಚಾರಿಕ ಮನೋಭಾವ ಬೆಳೆಸಿಕೊಳ್ಳದಿದ್ದರೆ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಜಾತಿ ವ್ಯವಸ್ಥೆಯೂ ನಿರ್ಮೂಲನೆಯಾಗುವುದಿಲ್ಲ ಎಂದು ಎಚ್ಚರಿಸಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಮಾಜಿಕ ಅಸಮಾನತೆ ನಿವಾರಣೆಗೆ ಸಹಕಾರಿಯಾಗಿವೆ. ವ್ಯವಸ್ಥೆಯ ಬದಲಾವಣೆಗೆ ಎಲ್ಲರ ಪ್ರಯತ್ನ ಅಗತ್ಯವಾಗಿದ್ದು, ಅದಕ್ಕೆ ಸಮಯ ಬೇಕಾಗುತ್ತದೆ. ಸರಿಯಾದ ಮಾರ್ಗದಲ್ಲಿ ನಿರಂತರ ಪ್ರಯತ್ನ ಮಾಡಿದರೆ ಯಶಸ್ಸು ಸಿಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.ಕಾರ್ಯಕ್ರಮದಲ್ಲಿ ಶೂದ್ರ ಸೇವಾ ಸಂಘದ ಅಧ್ಯಕ್ಷ ಹಾಗೂ ಶೂದ್ರ ಪತ್ರಿಕೆಯ ಸಂಪಾದಕ ರಾಮೇಗೌಡ, ಸಂಚಾಲಕ ಮುರಳೀಧರ ಹಾಲಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.





