ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗಲಿದೆ. ಇತ್ತ ಎಐಸಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದ್ದು ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಎಂ.ಬಿ ಪಾಟೀಲ್ ಸೇರಿದಂತೆ ಘಟಾನುಘಟಿ ನಾಯಕರ ಕ್ಷೇತ್ರ ಫಿಕ್ಸ್ ಆಗಿದೆ. ದಕ್ಷಿಣ ಕನ್ನಡದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿಗೆ ಎಐಸಿಸಿ ತನ್ನ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡಿದೆ.
ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಕೃಷ್ಣಪ್ಪ ಜಿ. , ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ರಮಾನಾಥ್ ರೈ , ಮೂಡಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮಿಥುನ್ ರೈ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ರಕ್ಷಿತ್ ಶಿವರಾಮ್ ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಯು.ಟಿ ಖಾದರ್ಗೆ ಟಿಕೆಟ್ ಘೋಷಣೆಯಾಗಿದೆ. ಈ ಮೂಲಕ ಪುತ್ತೂರು, ಮಂಗಳೂರು ಉತ್ತರ ಹಾಗೂ ದಕ್ಷಿಣ ಕ್ಷೇತ್ರಗಳ ಟಿಕೆಟ್ನ್ನು ಎಐಸಿಸಿ ಇನ್ನೂ ತನ್ನ ಬಳಿಯೇ ಇಟ್ಟುಕೊಂಡಿದ್ದು ಸಖತ್ ಪೈಪೋಟಿ ಇರುವ ಈ ಕ್ಷೇತ್ರಗಳಲ್ಲಿ ಯಾರನ್ನು ಕಣಕ್ಕಿಳಿಸಿದರೆ ಪಕ್ಷಕ್ಕೆ ಬಂಡಾಯದ ಬೇಗುದಿ ಕಡಿಮೆ ತಟ್ಟಬಹುದು ಎಂಬ ಲೆಕ್ಕಾಚಾರದಲ್ಲಿದೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಬಗ್ಗೆ ನೋಡೋದಾದ್ರೆ ಇಲ್ಲಿ ಕೋಡಿಂಬಾಡಿ ಅಶೋಕ್ ಕುಮಾರ್ ರೈ ಹಾಗೂ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೆಸರು ಮುನ್ನಲೆಗೆ ಬಂದಿದೆ. ಈ ಮೊದಲು ಬಿಜೆಪಿಯಲ್ಲಿದ್ದ ಅಶೋಕ್ ಕುಮಾರ್ ರೈ ಕಾಂಗ್ರೆಸ್ಗೆ ಜಂಪ್ ಆಗಿದ್ದಾರೆ.ಉದ್ಯಮಿ ಆಗಿರುವ ಅಶೋಕ್ ಕುಮಾರ್ ರೈ ಬಳಿಯಲ್ಲಿ ಹಣಬಲವಿದ್ದು ಕಾಂಗ್ರೆಸ್ನಿಂದ ಟಿಕೆಟ್ ಪಡೆಯೋಕೆ ಶತಾಯ ಗತಾಯ ಪ್ರಯತ್ನಿಸುತ್ತಿದ್ದಾರೆ . ಇನ್ನು ಶಕುಂತಲಾ ಶೆಟ್ಟಿ ಕಳೆದ ಬಾರಿ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸೋಲನ್ನು ಕಂಡಿದ್ದರು. ಪುತ್ತೂರಿನ ಮಾಜಿ ಶಾಸಕಿಯಾಗಿರುವ ಶಕುಂತಲಾ ಶೆಟ್ಟಿ ತಮ್ಮ ಅಧಿಕಾರಾವಧಿಯಲ್ಲಿ ಕ್ಷೇತ್ರದಲ್ಲಿ ತಾವು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನೇ ಮುಂದಿಟ್ಟುಕ್ಕೊಂಡು ಟಿಕೆಟ್ಗಾಗಿ ಲಾಬಿ ನಡೆಸಿದ್ದಾರೆ.
ಇನ್ನು ಮಂಗಳೂರು ಉತ್ತರ ಕ್ಷೇತ್ರದ ಕತೆಯೂ ಅಯೋಮಯವಾಗಿದೆ. ಈ ಕ್ಷೇತ್ರದಿಂದ ತಮಗೆ ಕಾಂಗ್ರೆಸ್ನಿಂದ ಟಿಕೆಟ್ ಬೇಕೆಂದು ಈವರೆಗೆ 11 ಮಂದಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿದರೆ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಕೆಪಿಸಿಸಿಗೆ ಅತೀ ಹೆಚ್ಚು ಅರ್ಜಿ ಸಲ್ಲಿಸಿದ ಕ್ಷೇತ್ರವೆಂದರೆ ಅದು ಮಂಗಳೂರು ಉತ್ತರ. ಉದ್ಯಮಿ ಇನಾಯತ್ ಅಲಿ ಈ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು ಜನಸಂಪರ್ಕ ಕಡಿಮೆಯಿದ್ದರೂ ಹಣಬಲದ ಮೂಲಕ ಕ್ಷೇತ್ರ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಾರೆ. ಮುಸ್ಲಿಂ ಧರ್ಮಕ್ಕೆ ಸೇರಿದವರಾಗಿದ್ದರೂ ಸಹ ಚರ್ಚ್, ದೇವಾಲಯಗಳಿಗೆ ಅನುದಾನ ನೀಡುವ ಮೂಲಕ ಕ್ಷೇತ್ರದಲ್ಲಿ ಎಲ್ಲಾ ಧರ್ಮದ ಜನರ ವಿಶ್ವಾಸ ಗಳಿಸಿಕೊಳ್ಳುವ ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ. ಇನ್ನು ಮೊಯಿಯುದ್ದೀನ್ ಬಾವಾ ಕೂಡ ಎಲ್ಲಾ ಸಮುದಾಯಗಳ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅಲ್ಲದೇ ಮಾಜಿ ಶಾಸಕ ಕೂಡ ಆಗಿರುವ ಇವರು ಸಾಕಷ್ಟು ಜನಸಂಪರ್ಕ ಹೊಂದಿದ್ದಾರೆ.
ಮಂಗಳೂರು ದಕ್ಷಿಣ ಕ್ಷೇತ್ರ ಕೂಡ ಕಾಂಗ್ರೆಸ್ಗೆ ದೊಡ್ಡ ತಲೆನೋವಾಗಿದೆ. ಈ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ಗಾಗಿ 8 ಮಂದಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿ ಹಾಲಿ ಶಾಸಕ ವೇದವ್ಯಾಸ ಕಾಮತ್ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯವನ್ನು ಚೆನ್ನಾಗಿಯೇ ಮಾಡಿರೋದ್ರಿಂದ ಇವರಿಗೆ ಪ್ರಬಲ ಅಭ್ಯರ್ಥಿ ಹುಡುಕುವುದು ಕಾಂಗ್ರೆಸ್ಗೆ ಕಬ್ಬಿಣದ ಕಡಲೆಯಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ಸೋಲು ಕಂಡಿದ್ದ ಜೆ.ಆರ್ ಲೋಬೋ, ವಿಧಾನಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜಾ ಹಾಗೂ ಬಿಲ್ಲವ ನಾಯಕ ಪದ್ಮರಾಜ್ ಈ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ನಿಂದ ಕ್ರಿಶ್ಚಿಯನ್ ಧರ್ಮಕ್ಕೆ ಈ ಕ್ಷೇತ್ರದಲ್ಲಿಯೇ ಟಿಕೆಟ್ ನೀಡುತ್ತಾ ಬರಲಾಗಿದೆ. ಆದರೆ ಈ ಬಾರಿ ಬಿಲ್ಲವ ಮುಖಂಡ ಪದ್ಮರಾಜ್ಗೆ ಈ ಕ್ಷೇತ್ರದಿಂದ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗ್ತಿದೆ. ಒಂದು ವೇಳೆ ಈ ಕ್ಷೇತ್ರದಿಂದ ಪದ್ಮರಾಜ್ಗೆ ಟಿಕೆಟ್ ಸಿಕ್ಕಿದಲ್ಲಿ ಕ್ರಿಶ್ಚಿಯನ್ರಿಗೆ ದಕ್ಷಿಣ ಕನ್ನಡದ ಇನ್ಯಾವ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಸಿಗುತ್ತೆ ಎಂಬ ಕುತೂಹಲ ಕೂಡ ಇದೆ.