ದಕ್ಷಿಣ ಕನ್ನಡ (Dakshina kannada) ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹೀಮಾನ್ (Abdul rahiman) ಕೊಲೆಯ ನಂತರ ಜಿಲ್ಲೆಯ ಕಾಂಗ್ರೆಸ್ ನಾಯಕರೇ ಸರ್ಕಾರದ ವಿರುದ್ಧ ಸಿಡಿದೆದ್ದು, ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದ್ದರು ಮತ್ತು ಕೆಲವು ನಾಯಕರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಸರ್ಕಾರ ಕೋಮು ಹಿಂಸೆ ನಿಗ್ರಹ ಪಡೆ ರಚನೆಗೆ ಮುಂದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಜಿಲ್ಲೆಯ ಶಾಂತಿ ಕದಡುವ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿವೆ. ಇಂತಹ ಪಟ್ಟಭದ್ರ ಹಿತಾಸಕ್ತಿಗಳನ್ನು ಬುಡಸಮೇತ ಕಿತ್ತುಹಾಕಬೇಕು ಎಂಬ ನಿಶ್ಚಿತ ನಿಲುವಿನಿಂದ ಕೋಮು ಹಿಂಸೆ ನಿಗ್ರಹ ಪಡೆ ರಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh gundu rao) ಹೇಳಿದ್ದಾರೆ.
ಹಿಂಸಾಚಾರದ ಮೂಲಕ ದ.ಕನ್ನಡ ಜಿಲ್ಲೆಯ ನೆಮ್ಮದಿ ಹಾಳು ಮಾಡುತ್ತಿರುವ ಶಕ್ತಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆ ಮಟ್ಟ ಹಾಕಲಿದೆ. ದ.ಕನ್ನಡ ಜಿಲ್ಲೆಯ ಜನ ನಿರ್ಭೀತಿ ಹಾಗೂ ಭಯಮುಕ್ತವಾಗಿ ಜೀವನ ನಡೆಸಬೇಕು ಎಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ನಾಯಕರು ಹೆಣದ ರಾಜಕೀಯ ಮಾಡುವುದನ್ನು ಬಿಟ್ಟರೆ ದ.ಕನ್ನಡ ಜಿಲ್ಲೆ ಸಹಜವಾಗಿಯೇ ಶಾಂತಿಯ ತಾಣವಾಗಲಿದೆ. ಆದರೆ ಜನರಲ್ಲಿ ಧರ್ಮದ ಅಫೀಮು ತುಂಬಿ ರಾಜಕೀಯ ಮಾಡುತ್ತಿರುವ ಬಿಜೆಪಿಯವರೆ ದ.ಕನ್ನಡ ಜಿಲ್ಲೆಯ ನೆಮ್ಮದಿ ಕಸಿಯುತ್ತಿರುವ ನಿಜವಾದ ಕಿರಾತಕರು. ಜನ ಈ ಸೂಕ್ಷ್ಮ ಅರಿಯಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.