ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ನಟ ಅಲ್ಲು ಅರ್ಜುನ್ ಸಲ್ಲಿಸಿದ್ದ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಅಲ್ಲದೆ, ಮುಂದಿನ ವಿಚಾರಣೆಗೆ ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಿದೆ.

ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಎ11 ಆರೋಪಿಯನ್ನಾಗಿ ಮಾಡಲಾಗಿತ್ತು. ಪ್ರಕರಣದ ದಾಖಲೆ ಪರಿಶೀಲಿಸಿದ ನಾಂಪಲ್ಲಿ ನ್ಯಾಯಾಲಯ ಪ್ರಾಥಮಿಕ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಎಲ್ಲಾ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿತ್ತು. ವಿಚಾರಣೆಗೆ ವೈಯಕ್ತಿಕವಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು. ಭಾನುವಾರದ ವಿಚಾರಣೆಗೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಪರ ವಕೀಲರು ವಿಶೇಷ ಮನವಿ ಸಲ್ಲಿಸಿದ್ದರು. ಸದ್ಯ ಅವರು ಮುಂಬೈನಲ್ಲಿ ನಿರ್ದೇಶಕ ಅಟ್ಲಿ ಅವರ ಹೊಸ ಚಿತ್ರ ‘ರಾಕಾ’ ಚಿತ್ರೀಕರಣದಲ್ಲಿ ನಿರತರಾಗಿರುವ ಕಾರಣ, ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಲು ಅನುಮತಿ ನೀಡಬೇಕೆಂದು ಕೋರಿದ್ದರು.

ಆದರೆ ನ್ಯಾಯಾಲಯ ಈ ಮನವಿಯನ್ನು ತಿರಸ್ಕರಿಸಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ, ಮುಂದಿನ ವಿಚಾರಣೆಗೆ ಖುದ್ದಿ ಹಾಜರಾಗಬೇಕು ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಅಲ್ಲು ಅರ್ಜುನ್ ಅವರಿಗೆ ವೈಯಕ್ತಿಕ ಹಾಜರಾತಿ ಕಡ್ಡಾಯವಾಗಿದೆ. ಮುಂದಿನ ವಿಚಾರಣೆಯನ್ನು ನಾಂಪಲ್ಲಿ ನ್ಯಾಯಾಲಯ ಜುಲೈ 6ಕ್ಕೆ ಮುಂದೂಡಿದೆ. ಅಂದು ಅಲ್ಲು ಅರ್ಜುನ್ ಖುದ್ದಾಗಿ ಕೋರ್ಟ್ಗೆ ಹಾಜರಾಗಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಏನಿದು ಪ್ರಕರಣ?
2024 ರ ಡಿಸೆಂಬರ್ 4ರಂದು ಹೈದರಾಬಾದ್ನ ಆರ್ಟಿಸಿ ಕ್ರಾಸ್ ರಸ್ತೆಯಲ್ಲಿರುವ ಸಂಧ್ಯಾ ಥಿಯೇಟರ್ನಲ್ಲಿ ‘ಪುಷ್ಪ 2: ದಿ ರೂಲ್’ ಚಿತ್ರದ ವಿಶೇಷ ಪ್ರೀಮಿಯರ್ ಪ್ರದರ್ಶನ ಆಯೋಜಿಸಲಾಗಿತ್ತು. ನಟ ಅಲ್ಲು ಅರ್ಜುನ್ ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ಥಿಯೇಟರ್ ಸುತ್ತಮುತ್ತ ಜಮಾಯಿಸಿದ್ದರು. ಈ ವೇಳೆ ಜನಜಂಗುಳಿ ಆಗಿದ್ದರಿಂದ ಕಾಲ್ತುಳಿತವಾಗಿತ್ತು. ಆ ಘಟನೆಯಲ್ಲಿ ರೇವತಿ ಎಂಬ 39 ವರ್ಷದ ಮಹಿಳೆ ಉಸಿರುಗಟ್ಟಿ ಮೃತಪಟ್ಟಿದ್ದರು. ಅವರ 8 ವರ್ಷದ ಪುತ್ರ ಶ್ರೀತೇಜ ಗಂಭೀರವಾಗಿ ಗಾಯಗೊಂಡಿದ್ದನು.

ಘಟನೆ ಬಳಿಕ ಮೃತರ ಕುಟುಂಬದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ತನಿಖೆ ವೇಳೆ ಕಾರ್ಯಕ್ರಮಕ್ಕೆ ಸರಿಯಾದ ಭದ್ರತಾ ಅನುಮತಿಗಳ ಕೊರತೆ, ಪೊಲೀಸ್ ಎಚ್ಚರಿಕೆ ನಿರ್ಲಕ್ಷ್ಯ ಮಾಡಿರುವುದು ಹಾಗೂ ಕಾರ್ಯಕ್ರಮ ನಿರ್ವಹಣೆಯಲ್ಲಿ ಸಮನ್ವಯದ ಕೊರತೆ ದುರಂತಕ್ಕೆ ಕಾರಣವಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ ಒಟ್ಟು 23 ಜನರನ್ನು ಆರೋಪಿಗಳನ್ನಾಗಿ ಸೇರಿಸಲಾಗಿದೆ.






