ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ. ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಪ್ರಸ್ತಾಪ ಇಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾಳೆ ಅಥವಾ ನಾಡಿದ್ದು ರಾಜ್ಯದಲ್ಲಿ ಯಾವುದೇ ರಾಜಕೀಯ ಬದಲಾವಣೆ ನಡೆಯುವುದಿಲ್ಲ. ದೆಹಲಿಯಲ್ಲಿ ನಡೆದ ಸಭೆಗಳ ಕುರಿತು ಹರಿದಾಡುತ್ತಿರುವ ಅಧಿಕಾರ ಹಸ್ತಾಂತರದ ಸುದ್ದಿಗಳು ಕೇವಲ ವದಂತಿಗಳು. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನೂ ಇನ್ನೂ ಕರೆದಿಲ್ಲ” ಎಂದು ಹೇಳುವ ಮೂಲಕ ಸಿದ್ದರಾಮಯ್ಯ ರಾಜೀನಾಮೆ ಕುರಿತ ಸುದ್ದಿಗಳನ್ನು ತಳ್ಳಿ ಹಾಕಿದರು.
ದೆಹಲಿಯಲ್ಲಿ ನಡೆದ ಹೈವೋಲ್ಟೇಜ್ ಸಭೆಗಳ ಬಗ್ಗೆ ಪ್ರತಿಕ್ರಿಯಿಸಿದ ಸುರ್ಜೇವಾಲಾ, “ನಿನ್ನೆ ನಡೆದ ಚರ್ಚೆಗಳಲ್ಲಿ ರಾಜ್ಯಸಭಾ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ ಮಾತ್ರ ಚರ್ಚೆ ನಡೆಸಲಾಗಿದೆ” ಎಂದರು. ಆದರೆ, ಸಿಎಂ ಬದಲಾವಣೆ ಕುರಿತ ಪ್ರಶ್ನೆಗಳಿಗೆ ನೇರ ಉತ್ತರ ನೀಡದೇ ಹೈಕಮಾಂಡ್ ಮಟ್ಟದಲ್ಲಿ ರಾಜತಾಂತ್ರಿಕ ಮೌನ ಮುಂದುವರಿಸಿದರು.ಈ ಮಧ್ಯೆ, ಮುಖ್ಯಮಂತ್ರಿ ಸ್ಥಾನ ತೊರೆಯಲಿದ್ದಾರೆ ಎಂಬ ವದಂತಿಗಳ ನಡುವೆ ಸಿದ್ದರಾಮಯ್ಯ ಪರ ಆಪ್ತ ಸಚಿವರು ಮತ್ತು ಶಾಸಕರು ತೀವ್ರ ಚಟುವಟಿಕೆಗೆ ಇಳಿದಿದ್ದಾರೆ. ದೆಹಲಿಯಿಂದ ವಾಪಸ್ಸಾದ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಆಪ್ತರ ತಂಡ, ಯಾವುದೇ ಕಾರಣಕ್ಕೂ ಈಗಲೇ ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿದೆ ಎನ್ನಲಾಗಿದೆ.

“ಸಿಎಲ್ಪಿ ಸಭೆಗೂ ಮುನ್ನ ರಾಜೀನಾಮೆ ಅಗತ್ಯವಿಲ್ಲ. ರಾಜ್ಯದ ಜನತೆ ಹೈಕಮಾಂಡ್ ಮುಖ ನೋಡಿ ಮತ ಹಾಕಿಲ್ಲ, ನಿಮ್ಮ ನಾಯಕತ್ವ ಮತ್ತು ಗ್ಯಾರಂಟಿ ಯೋಜನೆಗಳ ಮೇಲೆ ವಿಶ್ವಾಸ ಇಟ್ಟು ಕಾಂಗ್ರೆಸ್ಗೆ ಬೆಂಬಲ ನೀಡಿದ್ದಾರೆ. ನಾವೆಲ್ಲರೂ ನಿಮ್ಮ ಹೆಸರಿನಲ್ಲಿ ಗೆದ್ದಿದ್ದೇವೆ. ಹೀಗಾಗಿ ನೀವು ಸಿಎಂ ಸ್ಥಾನದಲ್ಲೇ ಮುಂದುವರಿಯಬೇಕು” ಎಂದು ಶಾಸಕರು ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಸುರ್ಜೇವಾಲಾ ಅವರ ಸ್ಪಷ್ಟನೆ ಬಳಿಕ ಸದ್ಯಕ್ಕೆ ಸಿದ್ದರಾಮಯ್ಯ ಬದಲಾವಣೆ ಕುರಿತ ಬಿಕ್ಕಟ್ಟು ತಾತ್ಕಾಲಿಕವಾಗಿ ತಣ್ಣಗಾದಂತಾಗಿದ್ದರೂ, ಮುಂದಿನ ದಿನಗಳಲ್ಲಿ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.





