ಈ ಹಿಂದೆ ಬೆಳಗಾವಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಶೀಘ್ರದಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಳಗಾವಿ : ರಾಜಕೀಯ ಕಾರಣಕ್ಕಾಗಿ ಮಹಾರಾಷ್ಟ್ರದಲ್ಲಿ ಗಡಿ ಸಮಸ್ಯೆ ಸೃಷ್ಟಿ ಮಾಡಲಾಗುತ್ತಿದೆ. ಕರ್ನಾಟಕ ಎಂದೂ ಗಡಿ ಸಮಸ್ಯೆ ಸೃಷ್ಟಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಕನ್ನಡ ಭವನ ಕ್ಷೇಮಾಭಿವೃದ್ಧಿ ಸಂಘದ ಕನ್ನಡ ಭವನ ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡದಲ್ಲಿ ಪ್ರಾಮಾಣಿಕತೆ, ಒಳ್ಳೆಯತನ ಇದೆ. ಕನ್ನಡದ ಸಾಕ್ಷಿ ಪ್ರಜ್ಞೆ ಮಾನವೀಯತೆಯಿಂದ ಕೂಡಿರುವಂಥದ್ದು.
ಕನ್ನಡದ ಪುರಂದರದಾಸರು, ಅಲ್ಲಮಪ್ರಭು, ಬಸವಣ್ಣ, ಅವರಿಂದ ಹರಿದುಬರುವ ಜ್ಞಾನದ ಭಂಡಾರ ಕನ್ನಡಿಗರನ್ನು ಬೆಳೆದಿದೆ. ಹಿಂದಿನವರು ಇದನ್ನು ನಮಗೆ ಕೊಟ್ಟಿದ್ದಾರೆ. ನಮ್ಮ ಕರ್ತವ್ಯ ಇದನ್ನು ಇನ್ನಷ್ಟು ಉತ್ಕೃಷ್ಟಗೊಳಿಸಿ ಬಿಟ್ಟುಕೊಡಬೇಕು. ಅದ್ಭುತ ರಂಗಮಂದಿರವನ್ನು ನಿರ್ಮಿಸಲಾಗಿದೆ ಎಂದರು.
ಗಡಿ ಭಾಗದ ಶಾಲೆಗಳ ಅಭಿವೃದ್ಧಿ ಬಗ್ಗೆ ಎಲ್ಲ ವ್ಯವಸ್ಥೆ ಕಲ್ಪಿಸಲಾಗುವುದು. ಗಡಿಯಾಚೆಗಿನ ಕನ್ನಡ ಶಾಲೆಗಳ ಬಗ್ಗೆಯೂ ಸಂಪೂರ್ಣ ಕಾಳಜಿ ವಹಿಸಲಾಗುವುದು. ಈಗಾಗಲೇ 100 ಕೋಟಿ ರೂ.ಗಳನ್ನು ಗಡಿ ಭಾಗದ ಅಭಿವೃದ್ಧಿಗೆ ನೀಡಲಾಗಿದೆ. ಕೆಲವೇ ದಿನಗಲ್ಲಿ ಗಡಿ ಭಾಗದಲ್ಲಿ ಏನಾಗಬೇಕೆಂದು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸೂಚಿಸಿದರೆ ಅದನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.
ಈ ಹಿಂದೆ ಬೆಳಗಾವಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಶೀಘ್ರದಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಲಾಗುವುದು. ರಂಗಮಂದಿರದ ಬಾಕಿಯಿರುವ ಕೆಲಸಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.






