ದೇಶದಲ್ಲಿ ಪ್ರಜಾಪ್ರಭುತ್ವ ರಕ್ಷಣೆ, ಸಾಂವಿಧಾನಿಕ ಹಕ್ಕುಗಳು ಹಾಗೂ ಸ್ವಾಯತ್ತ ಸಂಸ್ಥೆಗಳ ರಕ್ಷಣೆಯ ಸದುದ್ದೇಶದಿಂದ ವಿರೋಧ ಪಕ್ಷಗಳು ಒಂದಾಗಿವೆ, ಬಿಜೆಪಿ ಸರ್ಕಾರ ವಿರೋಧ ಪಕ್ಷಗಳ ಧ್ವನಿ ಅಡಗಿಸಲು ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಸಿಬಿಐ, ಐಟಿ ಸಂಸ್ಥೆಗಳನ್ನು ಅಸ್ತ್ರವಾಗಿ ಬಳಸುತ್ತಿದೆ. ರಾಹುಲ್ ಗಾಂಧಿ ಅವರ ಅನರ್ಹತೆ, ಮಹಾರಾಷ್ಟ್ರದ ಬೆಳವಣಿಗೆ ಇದಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ.
ಮಣಿಪುರ ಕಳೆದ 75 ದಿನಗಳಿಂದ ಹೊತ್ತಿ ಉರಿಯುತ್ತಿದೆ, ಆ ಬಗ್ಗೆ ಒಂದೇ ಒಂದು ಪರಿಹಾರ ಇಲ್ಲ, ಈ ಬಗ್ಗೆ ದೇಶದ ಪ್ರಧಾನಮಂತ್ರಿಗಳು ಒಂದೇ ಒಂದು ಮಾತನಾಡಿಲ್ಲ, ಇದು ಆಘಾತಕಾರಿ ಬೆಳವಣಿಗೆ, ಇನ್ನು ದೇಶದ ಜನ ನಿರುದ್ಯೋಗ, ಬೆಲೆ ಏರಿಕೆ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.ನಾವು ಅಧಿಕಾರ ಪಡೆಯಲು ಸಭೆ ಸೇರುತ್ತಿಲ್ಲ. ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನಡೆಯುತ್ತಿರುವ ಸಭೆ ಇದಾಗಿದೆ ಎಂದು ತಿಳಿಸಿದ್ದಾರೆ.
ಈ ಸರ್ಕಾರ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದು, ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದ್ದು, ಸಮಯ ಬಂದಾಗ ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ, ಇಂದು 26 ವಿರೋಧ ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡಲು ಮುಂದಾಗಿವೆ, ಇದು ವಿರೋಧ ಪಕ್ಷಗಳ ಎರಡನೇ ಸಭೆಯಾಗಿದ್ದು, ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಗುವುದು, 20ರಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಅಲ್ಲಿ ಯಾವ ರೀತಿ ಹೋರಾಟ ಮಾಡಬೇಕು ಎಂಬ ತಂತ್ರಗಾರಿಕೆ ರೂಪಿಸಲಾಗುವುದು. ಈ ಸಭೆ ರಾಷ್ಟ್ರ ರಾಜಕಾರಣದಲ್ಲಿ ಗೇಮ್ ಚೆಂಜರ್ ಆಗಲಿದೆ. ಪಾಟ್ನಾ ಸಭೆ ನಂತರ ಎಲ್ಲಾ ವಿರೋಧ ಪಕ್ಷಗಳನ್ನು ಏಕಾಂಗಿಯಾಗಿ ಎದುರಿಸಬಲ್ಲೇವು ಎಂದು ಬೀಗುತ್ತಿದ್ದವರು ಈಗ ಬೇರೆ ಪಕ್ಷಗಳ ಜೊತೆ ಮೈತ್ರಿಗೆ ಮುಂದಾಗಿದ್ದಾರೆ. ಇದು ವಿರೋಧ ಪಕ್ಷಗಳ ಒಗ್ಗಟ್ಟಿನ ಮೊದಲ ಯಶಸ್ಸಾಗಿದೆ ಎಂದು ಕೆ.ಸಿ. ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ.
ಇನ್ನು ಈ ಕುರಿತು ಮಾತನಾಡಿದ ಜೈರಾಮ್ ರಮೇಶ್ ಪ್ರಧಾನಮಂತ್ರಿಗಳು ಹಾಗೂ ಬಿಜೆಪಿಗರು ಗಾಬರಿಯಾಗಿದ್ದಾರೆ, ಪಾಟ್ನಾ ಸಭೆ ನಂತರ ಅವರಿಗೆ ಎನ್ ಡಿ ಎ ಮೈತ್ರಿಕೂಟ ನೆನಪಾಗಿದೆ. ಈ ಮೈತ್ರಿಕೂಟಕ್ಕೆ ಜೀವ ತುಂಬುವ ಕೆಲಸ ಮಾಡುತ್ತಿದ್ದಾರೆ. ಯುಪಿಎ ಮೈತ್ರಿಕೂಟ ಜೂನ್ ನಲ್ಲಿ ಪಾಟ್ನಾದಲ್ಲಿ ಸಭೆ ನಡೆದಿದ್ದು, ಜುಲೈನಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿದೆ. 24 ವಿರೋಧ ಪಕ್ಷಗಳ ನಾಯಕರು ಈ ಸಭೆಯಲ್ಲಿ ಸರ್ಕಾರದ ವಿರುದ್ಧ ಸಂಸತ್ ಒಳಗೆ ಹಾಗೂ ಹೊರಗೆ ಹೇಗೆ ಹೋರಾಡಬೇಕು ಎಂದು ಸಭೆ ನಡೆಸಲಿದೆ.
ಇದು ಒಂದು ಪಕ್ಷದ ಮೈತ್ರಿ ಅಲ್ಲ. ಪಾಟ್ನಾ ಸಭೆಯಲ್ಲಿ 24 ಪಕ್ಷಗಳು ಭಾಗವಹಿಸಿದ್ದು, ಬೆಂಗಳೂರಿನ ಸಭೆಗೆ 26 ಪಕ್ಷಗಳು ಭಾಗವಹಿಸಲಿವೆ. ಮುಂದೆ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ, ರಾಹುಲ್ ಗಾಂಧಿ ನಮ್ಮ ಪಕ್ಷದ ಮಾಸ್ ನಾಯಕ. ಕಳೆದ ಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರು ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆಯನ್ನು ಶ್ಲಾಘಿಸಿದ್ದಾರೆ. ಜಾತ್ಯಾತೀತ ಪರವಾದ, ಸರ್ಕಾರದ ವಿರುದ್ಧ ಹೋರಾಡುವ ಎಲ್ಲರು ಇನ್ನು ತ್ರಿಶಂಕು ಸ್ಥಿತಿಯಲ್ಲಿ ಇರಲು ಸಾಧ್ಯವಿಲ್ಲ. ಪಕ್ಷಗಳು ತಮ್ಮ ತೀರ್ಮಾನ ಮಾಡಬೇಕು. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಅವರು ಬಯಸುತ್ತಾರೋ ಇಲ್ಲವೋ ಎಂಬುವುದು ಅವರಿಗೆ ಬಿಟ್ಟ ವಿಚಾರ. ಎಂದು ತಿಳಿಸಿದ್ದಾರೆ
ಒಟ್ಟಾರೆಯಾಗಿ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಹೆಜ್ಜೆಯನ್ನ ಇಡಲು ಮುಂದಾಗಿರುವ ವಿಪಕ್ಷಗಳು, ಈಗ ಒಗ್ಗಟ್ಟಿನಿಂದ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನ ಕಟ್ಟಿ ಹಾಕಲು ಬೇಕಾದ ಎಲ್ಲಾ ರೀತಿಯಾದ ವ್ಯವಸ್ಥೆಗಳನ್ನ ರೂಪಿಸಿಕೊಂಡಿದ್ದಾರೆ. ಆದ್ರೆ ಇದು ಯಾವ ರೀತಿಯಾಗಿ ವಿಪಕ್ಷಗಳಿಗೆ ಲಾಭ ತರಲಿದೆ ಅನ್ನೋದನ್ನ ಕಾದು ನೋಡಬೇಕಾಗಿದೆ.