ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ನೀಡಿರುವ ಹೇಳಿಕೆಯನ್ನು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಖಂಡಿಸಿದೆ.
ಮಾತ್ರವಲ್ಲದೇ 8 ದಿನಗಳೊಳಗೆ ಸಚಿವ ಅಶ್ವತ್ಥನಾರಾಯಣ ಅವರನ್ನು ಬಂಧಿಸಬೇಕು. ಇಲ್ಲವಾದರೆ ಮಾರ್ಚ್ 10ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳುವುದಾಗಿ ಎಂದು ಒಕ್ಕೂಟದ ಸಂಚಲನಾ ಸಮಿತಿ ಸದಸ್ಯ ಅನಂತನಾಯ್ಕ ಗುರುವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
![](https://pratidhvani.com/wp-content/uploads/2021/09/209069-siddu-1.jpg)
ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಮಾತನಾಡಿ, ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದುಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ ಅಶ್ವತ್ಥನಾರಾಯಣ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕೂಡಲೇ ಸಚಿವರನ್ನು ಬಂಧಿಸಬೇಕು. ನಿರ್ಲಕ್ಷ್ಯ ವಹಿಸಿದ ಮಂಡ್ಯ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಪದೇ ಪದೇ ಅಸಾಂವಿಧಾನಿಕ ಮಾತುಗಳ ಮೂಲಕ ಸಿದ್ದರಾಮಯ್ಯ ಅವರನ್ನು ಅವಮಾನಿಸುತ್ತಿರುವ ಶಾಸಕ ಸಿ.ಟಿ. ರವಿ, ಕೆ.ಎಸ್ ಈಶ್ವರಪ್ಪ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಸಿದ್ದರಾಮಯ್ಯ ಅವರಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಒಕ್ಕೂಟದ ಸಂಚಾಲನಾ ಸಮಿತಿ ಸದಸ್ಯೆ ಬಿ.ಟಿ. ಲಲಿತಾನಾಯಕ್, ಒಕ್ಕೂಟದ ಸಂಚಾಲಕ ಎಣ್ಣೆಗೆರೆ ಆರ್. ವೆಂಕಟರಾಮಯ್ಯ, ಸದಸ್ಯರಾದ ಎನ್.ವಿ. ನರಸಿಂಹಯ್ಯ, ಸುರೇಶ್ ಎಂ. ಲಾತೋರ್, ಎನ್. ಅನಂತನಾಯ್ಕ, ಜಿ.ಡಿ. ಗೋಪಾಲ್ ಇದ್ದರು.