ದೇಶದ ಹಳೆಯ ರಾಜಕೀಯ ಪಕ್ಷ ಕಾಂಗ್ರೆಸ್ಗೆ ತನ್ನ ನಾಯಕರನ್ನೇ ನಿಯಂತ್ರಣದಲ್ಲಿಟ್ಟುಕೊಳ್ಳಲು ಸೋಲುತ್ತಿದೆ. ಒಂದು ಕಡೆ ಪಕ್ಷ ನಾಯಕತ್ವದ ಬಿಕ್ಕಟ್ಟು ಎದುರಿಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ನ ಹಲವು ನಾಯಕರು ತಮ್ಮನ್ನು ಬಿಜೆಪಿ ಮೊದಲಾದ ಪಕ್ಷಗಳಿಗೆ ಮಾರಿಕೊಳ್ಳುತ್ತಿದ್ದಾರೆ. ಸದ್ಯ, ಉತ್ತರ ಪ್ರದೇಶದ ಇಬ್ಬರು ಕಾಂಗ್ರೆಸ್ ನಾಯಕರು ʼತಮ್ಮನ್ನು ಪಕ್ಷ ಅಲಕ್ಷಿಸುತ್ತಿದೆʼ ಎಂದು ಹೇಳಿ ಪಕ್ಷದ ಪ್ರಾಥಮಿಕ ಸದಸ್ಯತ್ವ ತೊರೆದಿದ್ದಾರೆ.
ಹಳೆಯ ಮತ್ತು ನಿಷ್ಠಾವಂತ ನಾಯಕರನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಶೈಲೇಂದ್ರ ಸಿಂಗ್ ಮತ್ತು ರಾಜೇಶ್ ಸಿಂಗ್ ತಮ್ಮ ರಾಜೀನಾಮೆ ಪತ್ರವನ್ನು ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ಕುಮಾಲ್ ಲಲ್ಲು ಅವರಿಗೆ ಕಳುಹಿಸಿದ್ದಾರೆ.

ಅಲ್ಲದೆ, ತಮ್ಮ ರಾಜಿನಾಮೆ ವಿಚಾರವನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಗಮನಕ್ಕೆ ತಂದಿರುವುದಾಗಿ ಉಭಯ ನಾಯಕರು ತಿಳಿಸಿದ್ದಾರೆ.
ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಶೈಲೇಂದ್ರ ಸಿಂಗ್, ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷರನ್ನು ಗುರಿಯಾಗಿಸಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಲಲ್ಲು ಅಧಿಕಾರ ವಹಿಸಿಕೊಂಡ ನಂತರ ನಿಷ್ಠಾವಂತ ಮತ್ತು ಹಿರಿಯ ಕಾಂಗ್ರೆಸ್ ಸದಸ್ಯರನ್ನು ನಿರ್ಲಕ್ಷಿಸಲಾಗಿದೆ. ಇದೇ ಕಾರಣಕ್ಕಾಗಿಯೇ ಸಮರ್ಥ ನಾಯಕರು ಪಕ್ಷವನ್ನು ತೊರೆಯುತ್ತಿದ್ದಾರೆ ಎಂದು ಾವರು ಆರೋಪಿಸಿದ್ದಾರೆ.
ಪಕ್ಷದ ಪರಿಸ್ಥಿತಿಯ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಗೆ ಹಲವು ಬಾರಿ ತಿಳಿಸಿದ್ದೇನೆ. ಆದರೆ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ಗೆ ರಾಜೀನಾಮೆ ನೀಡುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಅವರು ಹೇಳಿದ್ದಾರೆ.
ವಿದ್ಯಾರ್ಥಿ ದಿನಗಳಿಂದಲೂ ಕಾಂಗ್ರೆಸ್ನ ಸಕ್ರಿಯ ಸದಸ್ಯನಾಗಿರುವ ನಾನು, ಕಳೆದ 25 ವರ್ಷಗಳಿಂದ ಎನ್ಎಸ್ಯುಐ, ಯುವ ಕಾಂಗ್ರೆಸ್ ಮತ್ತು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಎಐಸಿಸಿಯ ಚುನಾಯಿತ ಸದಸ್ಯನಾಗಿದ್ದೆ. ಆದರೆ ಕಾಂಗ್ರೆಸ್ನಲ್ಲಿ ಸದ್ಯದ ವಾತಾವರಣ ಮತ್ತು ಹಳೆಯ ಕಾಂಗ್ರೆಸ್ ಸದಸ್ಯರ ನಿರ್ಲಕ್ಷ್ಯದಿಂದಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೇಶ್ ಸಿಂಗ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಇಬ್ಬರು ನಾಯಕರು ಮಾಡಿರುವ ಆರೋಪಗಳು ಆಧಾರರಹಿತ ಎಂದು ತಳ್ಳಿ ಹಾಕಿರುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ರಾಘವೇಂದ್ರ ಪ್ರತಾಪ್ ಸಿಂಗ್, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಲಲ್ಲು ಅವರ ನಾಯಕತ್ವದಲ್ಲಿ ‘ನ್ಯಾಯ ಪಂಚಾಯತ್’ ಮತ್ತು ಬೂತ್ ಮಟ್ಟದಿಂದ ಕಾಂಗ್ರೆಸ್ ಅನ್ನು ಬಲಪಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.