ಬೆಂಗಳೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಇರುವಾಗಲೇ ಇಬ್ಬರು ಮಾಜಿ ಶಾಸಕರು ಮತ್ತು ಒಬ್ಬ ಮಾಜಿ ಮೇಯರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕೊಳ್ಳೆಗಾಲ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಂಜುಂಡಸ್ವಾಮಿ ಮತ್ತು ವಿಜಯಪುರದ ಮಾಜಿ ಶಾಸಕ ಮನೋಹರ ಐನಾಪುರ ಹಾಗೂ ಮೈಸೂರು ಮಾಜಿ ಮೇಯರ್ ಪುರುಷೋತ್ತಮ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಕಾಂಗ್ರೆಸ್ ಸೇರ್ಪಡೆಯಾದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರ ಜೊತೆ ಎಲ್ಲರೂ ಕಾಂಗ್ರೆಸ್ ಸೇರಿದರು.
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮುಖಂಡರಾದ ಸಲೀಂ ಅಹ್ಮದ್, ಪ್ರಿಯಾಂಕ್ ಖರ್ಗೆ, ಆರ್. ಧ್ರುವನಾರಾಯಣ, ರಾಜಶೇಖರ್ ಪಾಟೀಲ ಇದ್ದರು.
ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್, ಇವತ್ತು ಮಾಜಿ ಶಾಸಕರು ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹಾಲಿ ಶಾಸಕರು ಪಕ್ಷ ಸೇರಲಿದ್ದು, ಅವರ ಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.
ನಂಜುಂಡಸ್ವಾಮಿ ಬಿಜೆಪಿಯಲ್ಲಿದ್ದರು. ಕೊಳ್ಳೆಗಾಲದಲ್ಲಿ ಅನೇಕ ಚುನಾವಣೆ ಎದುರಿಸಿದ್ದರು. ಅವರು ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ ಒಪ್ಪಿ ಕಾಂಗ್ರೆಸ್’ಗೆ ಬಂದಿದ್ದಾರೆ. ಮನೋಹರ್ ಐನಾಪೂರ ಅವರು ನಾಗಠಾಣ ಕ್ಷೇತ್ರದ ಮಾಜಿ ಶಾಸಕ. ಅವರು ಮತ್ತು ಮಾಜಿ ಮೇಯರ್ ಪುರುಷೋತ್ತಮ್ ಕೂಡಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದರು.