ಚೆನ್ನೈ: ನಟಿ ತ್ರಿಶಾ ಕೃಷ್ಣನ್ ಕುರಿತು ಸಾರ್ವಜನಿಕ ವೇದಿಕೆಯಲ್ಲಿ ಅವಹೇಳನಕಾರಿ ಹಾಗೂ ಅಶ್ಲೀಲ ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಕಾವೇರಿ ನೀರು ಹಂಚಿಕೆ ಕುರಿತ ಸಾರ್ವಜನಿಕ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಭಾಷಣ ಮಾಡುತ್ತಿದ್ದ ವೇಳೆ ನಟಿ ತ್ರಿಶಾ ಕೃಷ್ಣನ್ ಅವರಿಗೆ ಅವಮಾನ ಮಾಡುವ ರೀತಿಯಲ್ಲಿ ಪದ ಬಳಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಉದಯನಿಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬಂದಿದ್ದವು.

ಅಲ್ಲದೇ ಟಿವಿಕೆ ಪಕ್ಷ ಉದಯನಿಧಿ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ಸಾರ್ವಜನಿಕ ವೇದಿಕೆಯಲ್ಲಿ ಮಹಿಳೆಯೊಬ್ಬರ ವಿರುದ್ಧ ಈ ರೀತಿ ಮಾತನಾಡಿದವರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿತ್ತು. ದೂರಿನ ಮೇಲೆ ವಿಚಾರಣೆ ನಡೆಸಿದ ಪೊಲೀಸರು ಇಂದು ಚೆನ್ನೈನ ಉದಯನಿಧಿ ಅವರ ನಿವಾಸದಲ್ಲೇ ಬಂಧಿಸಿದ್ದಾರೆ.

ಬಂಧನದ ವೇಳೆ ನಗುತ್ತಲೇ ಮನೆಯಿಂದ ಹೊರಬಂದ ಉದಯನಿಧಿ ಸ್ಟಾಲಿನ್, ಈ ಬಂಧನ ತಮಾಷೆಯಾಗಿದೆ. ನಾನು ಮುಖ್ಯಮಂತ್ರಿಯವರ ಹೆಸರನ್ನು ಹೊರತುಪಡಿಸಿ ಬೇರೆ ಯಾರ ಹೆಸರನ್ನೂ ಹೇಳಿಲ್ಲ. ಇದನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿದ್ದಾರೆ. ಸದ್ಯ ಉದಯನಿಧಿ ಸ್ಟಾಲಿನ್ ಬಂಧನ ತಮಿಳುನಾಡು ರಾಜಕೀಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.






