ಮಂಡ್ಯ:
ಹವಾಮಾನ ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ ಮತ್ತೊಂದು ಗಂಭೀರ ಎಚ್ಚರಿಕೆ ನೀಡಿದ್ದಾರೆ.ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ ಹಾಗೂ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ಬಂಡೆ ಶನೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಮಹಾ ರಾಜಗೋಪುರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಹವಾಮಾನ ವೈಪರಿತ್ಯದ ಪರಿಣಾಮಗಳನ್ನು ವಿವರಿಸಿದರು.ಹವಾಮಾನ ಬದಲಾವಣೆಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಆಹಾರ ಮತ್ತು ನೀರಿನ ಅಭಾವ ಉಂಟಾಗುವ ಭೀತಿ ಇದೆ ಎಂದು ಅವರು ತಿಳಿಸಿದರು. ಜೊತೆಗೆ, ಪ್ರಕೃತಿಯಲ್ಲಿ ಅನಿರೀಕ್ಷಿತ ಏರುಪೇರುಗಳು ಸಂಭವಿಸಿ ಅಕಾಲಿಕ ಮರಣಗಳ ಪ್ರಮಾಣ ಹೆಚ್ಚಾಗುವ ಸಾಧ್ಯತೆಯನ್ನೂ ಸೂಚಿಸಿದರು.ಆದರೆ, ದೇಶದ ಇತರ ಭಾಗಗಳಿಗಿಂತ ಕರ್ನಾಟಕಕ್ಕೆ ದೊಡ್ಡ ಮಟ್ಟದ ಸಂಕಷ್ಟ ಎದುರಾಗುವುದಿಲ್ಲ ಎಂದು ಅವರು ಸಮಾಧಾನ ವ್ಯಕ್ತಪಡಿಸಿದರು.

ಜನರಲ್ಲಿ ದೈವಭಕ್ತಿ ಹೆಚ್ಚುತ್ತಿರುವ ಹಿನ್ನೆಲೆ ಮಳೆ-ಬೆಳೆ ಉತ್ತಮವಾಗಿ ರಾಜ್ಯದ ಜನರು ಸಮೃದ್ಧ ಜೀವನ ನಡೆಸಲಿದ್ದಾರೆ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದರು.“ಶನೇಶ್ವರ ಸ್ವಾಮಿ ಪ್ರತಿಯೊಬ್ಬನಿಗೂ ಮಾರ್ಗದರ್ಶಕನಾಗಿ ಸರಿ-ತಪ್ಪುಗಳನ್ನು ತಿದ್ದಿ ಸನ್ಮಾರ್ಗದಲ್ಲಿ ನಡೆಸುತ್ತಾನೆ” ಎಂದು ಶ್ರೀಗಳು ಅಭಿಪ್ರಾಯಪಟ್ಟರು.






