ಕೊರೋನಾ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇ ದಿನೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಣಕ್ಕೆ ತರುವುದು ರಾಜ್ಯ ಸರ್ಕಾರಕ್ಕೂ ಒಂದು ಸವಾಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಸುಮಾರು ೬ ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದರು.
ಮೇಕೆದಾಟು ಪಾದಯಾತ್ರೆಗೆ ಸಂಬಂಧಿಸಿದಂತೆ ಇನ್ನೂ ಏಕೆ ಕಾಂಗ್ರೆಸ್ ನಾಯಕರನ್ನು ಎಫ್ಐಆರ್ ದಾಖಲಾದರೂ ಬಂಧಿಸಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಹೌದು ನ್ಯಾಯಾಲಯ ಕೂಡ ಈ ಬಗ್ಗೆ ನಿರ್ದೇಶನ ನೀಡಿದೆ. ಆದರೆ, ಒಬ್ಬ ಮಾಜಿಮುಖ್ಯಮಂತ್ರಿಯನ್ನು ಬಂಧಿಸಿ ಜೈಲಿನಲ್ಲಿಡಲು ನಮಗೂ ಮನಸು ಬರುತ್ತಿಲ್ಲ. ಕಾಂಗ್ರೆಸ್ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಪ್ರತಿದಿನ ಸಾವಿರಾರು ಜನ ಪಾದಯಾತ್ರೆ ಮಾಡುತ್ತಿದ್ದಾರೆ. ಅದರಲ್ಲಿ ಎಷ್ಟು ಜನರಿಗೆ ಕೊರೋನಾ ಬಂದಿದೆಯೋ ಗೊತ್ತಿಲ್ಲ. ಈಗಾಗಲೇ ಕಾಂಗ್ರೆಸ್ ನಾಯಕರೇ ಆಗಿರುವ ಹೆಚ್.ಎಂ. ರೇವಣ್ಣ, ಶಿವಶಂಕರ್ ರೆಡ್ಡಿ, ಸಿ.ಎಂ. ಇಬ್ರಾಹಿಂ ಮೊದಲಾದ ಕಾಂಗ್ರೆಸ್ ನಾಯಕರಿಗೆ ಕೋವಿಡ್ ಬಂದಿದೆ. ಇದನ್ನು ಅರಿತು ಕಾಂಗ್ರೆಸ್ ನಾಯಕರು ನಡೆದುಕೊಳ್ಳಲಿ. ಕೋವಿಡ್ ಮುಗಿದ ನಂತರ ಯಾವ ಪಾದಯಾತ್ರೆಯನ್ನಾದರೂ ಅವರು ಮಾಡಲಿ ಬೇಡ ಎಂದವರು ಯಾರು ಎಂದರು.