ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ಬಜಟ್ ಮಂಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ ಬಹು ನಿರೀಕ್ಷಿತ ಅದರಲ್ಲೂ ಆರ್ಥಿಕತೆಯ ಬಗ್ಗೆ ಆಳವಾಗಿ ಜ್ಞಾನ ಹೊಂದಿರುವ ಸಿಎಂ ಬಜೆಟ್ನಲ್ಲಿ ಇಲಾಖೆಗಳಿಗೆ ಅಪಾರ ಅನುದಾನ ಘೋಷಿಸಿದ್ದಾರೆ.

ಮುಖ್ಯವಾಗಿ ಸಚಿವ ಮಧು ಬಂಗಾರಪ್ಪ ಜವಾಬ್ದಾರಿ ಹೊಂದಿರುವ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ವಿವಿಧ ಕಾರ್ಯಕ್ರಮಗಳ ಬಗ್ಗೆ ಘೋಷಿಸಿದ್ದಾರೆ. ಈ ಬಾರಿಯ 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಖಾಸಗಿ ಶಾಲೆಗಳ ಮಾನ್ಯತೆ ಪಡೆಯುವ ಹಾಗೂ ನವೀಕರಿಸುವ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಸಲು ಅನುಮತಿಸಿ ಸರಳೀಕರಣಗೊಳಿಸಲಾಗಿದೆ. 2025–26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಸವಲತ್ತುಗಳನ್ನು ಮೊದಲ ಬಾರಿಗೆ ನೇರ ನಗದು ವರ್ಗಾವಣೆ (DBT) ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಗ್ರಾಮೀಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರಗಳನ್ನು ಆನ್-ಲೈನ್ ಮೂಲಕ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ADB ನೆರವಿನೊಂದಿಗೆ 500 ಶಾಲೆಗಳು, KKRDB ನಿಧಿಯಿಂದ 200 ಶಾಲೆಗಳು ಹಾಗೂ KMERC ನಿಧಿಯಿಂದ 100 ಶಾಲೆಗಳು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ವೆಚ್ಚ ಮಾಡಲಾಗುವುದು ಎಂದಿದ್ದಾರೆ.
ಇದನ್ನೂ ಓದಿ : ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ
ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS) ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣಿಸಿ ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲಾಗುವುದು ಹಾಗೂ ಸದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ವಿಶೇಷವಾಗಿ ದಾಖಲಾತಿ ಪ್ರಮಾಣ ಮತ್ತು ಕಲಿಕೆಯ ಫಲಿತಾಂಶಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ 1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. 2026-27ನೇ ಸಾಲಿನಿಂದ ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು, 1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ.ಗಳು, ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ.ಗಳು ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಸದರಿ ಅನುದಾನವನ್ನು ಶಾಲಾ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ನೇರವಾಗಿ ವರ್ಗಾಯಿಸಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಾಮರ್ಥ್ಯ ವೃದ್ಧಿಗಾಗಿ ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮವನ್ನು 24 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು. ಐಐಟಿ ಧಾರವಾಡದ ಸಹಯೋಗದೊಂದಿಗೆ 8 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆಯಲ್ಲಿ AI ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯವನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಸಂಪನ್ಮೂಲ ಕೇಂದ್ರಗಳಲ್ಲಿ (BRC) ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುವುದು. ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು. ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ತಿಳಿಸಿದ್ದಾರೆ.





