ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕುರಿತ ಊಹಾಪೋಹಗಳ ನಡುವೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರ್ಣಾವಧಿ ಐದು ವರ್ಷ ಅಧಿಕಾರದಲ್ಲೇ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013ರಲ್ಲಿ ಹೈಕಮಾಂಡ್ ಪ್ರತ್ಯೇಕವಾಗಿ ಘೋಷಣೆ ಮಾಡದಿದ್ದರೂ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಇದೇ ರೀತಿಯಾಗಿ 2023ರಲ್ಲಿ ಅವರನ್ನು ಸಿಎಂ ಆಗಿ ನೇಮಿಸಲಾಗಿದ್ದು, 2028ರವರೆಗೆ ಅವಧಿ ಪೂರ್ಣಗೊಳಿಸುವುದು ಸಹಜ ಎಂದು ಹೇಳಿದರು.

ಹೈಕಮಾಂಡ್ ಯಾವುದೇ ಗೊಂದಲ ಸೃಷ್ಟಿಸಿಲ್ಲ ಮತ್ತು ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯೂ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈ ಕುರಿತು ಹೊರಬರುತ್ತಿರುವ ಮಾತುಗಳು ವೈಯಕ್ತಿಕ ಅಭಿಪ್ರಾಯ ಮಾತ್ರವೆಂದು ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುರಿತು ಮಾತನಾಡಿದ ಪರಮೇಶ್ವರ, ಅವರು ಪಕ್ಷದ ಪ್ರಮುಖ ನಾಯಕರು ಆಗಿದ್ದು, ಯಾವುದೇ ಅಸಮಾಧಾನ ಇಲ್ಲ ಎಂದು ತಿಳಿಸಿದರು. “ನಮ್ಮ ಎಲ್ಲಾ ಶಾಸಕರು ಸಿಎಂ ಸ್ಥಾನಕ್ಕೆ ಅರ್ಹರು, ಆದರೆ ಈಗ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ” ಎಂದರು.

ಇದೇ ವೇಳೆ ಉಪ ಚುನಾವಣಾ ಫಲಿತಾಂಶ ಸರ್ಕಾರದ ಭವಿಷ್ಯವನ್ನು ನಿರ್ಧರಿಸುವುದಿಲ್ಲ ಎಂದು ಹೇಳಿದ ಅವರು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರದ ಆಡಳಿತದ ಮೇಲಿನ ನಂಬಿಕೆಯಿಂದ ಜನ ಬೆಂಬಲ ನೀಡುತ್ತಾರೆ ಎಂದು ಅಭಿಪ್ರಾಯಪಟ್ಟರು.






