ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ರಾಜ್ಯದಾದ್ಯಂತ ಈ ವರೆವಿಗೂ 1,52,863 ಅರ್ಜಿಗಳು ಸ್ವೀಕೃತಗೊಂಡಿದ್ದು, 1,33,803 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ನಗರದ ತಮ್ಮ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಇ-ಸ್ವತ್ತು ತಂತ್ರಾಂಶದ ಕಾರ್ಯನಿರ್ವಹಣೆ ಹಾಗೂ ಪ್ರಗತಿಯನ್ನು ಪರಿಶೀಲಿಸಿದರು. ಅಲ್ಲದೇ, ಹೊಸ ನಮೂನೆ 11ಬಿ ಗೆ ಸಂಬಂಧಿಸಿದಂತೆ ಈವರೆಗೆ 76,093 ಅರ್ಜಿಗಳು ಸ್ವೀಕೃತವಾಗಿವೆ. ಈ ಅರ್ಜಿಗಳು ವಿವಿಧ ಹಂತಗಳಲ್ಲಿ ಅನುಮೋದನೆಗೆ ಬಾಕಿ ಉಳಿದಿದ್ದು, ಈ ಅರ್ಜಿಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡುವಲ್ಲಿ ಕ್ರಮವಹಿಸಲಾಗುತ್ತಿದೆ ಎಂದೂ ಸಚಿವರು ಹೇಳಿದ್ದಾರೆ.
ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಮತ್ತು ಬಳಕೆದಾರರು ಅರ್ಜಿಗಳನ್ನು ಅನುಮೋದನೆ ಮಾಡುವಂತಹ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಲಹೆಗಳು ಬರುತ್ತಿವುದನ್ನು ಗಮನಿಸಿರುವ ಸಚಿವರು ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಈ ಕೆಳಗಿನ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಇ-ಸ್ವತ್ತಿನ ಕುರಿತು ನೀಡಿರುವ ಇನ್ನಷ್ಟು ವಿವರವಾದ ಮಾಹಿತಿ ಇಲ್ಲಿದೆ ನೋಡಿ..
1. ನಮೂನೆ–11ಬಿ ಖಾತೆಗಳನ್ನು ನಮೂನೆ–11ಎ ಗಳಾಗಿ ಪರಿವರ್ತನೆ ಮಾಡಿಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ.
2. ಹೊಸ ಬಹುಮಹಡಿ (ಅಪಾರ್ಟ್ಮೆಂಟ್) ಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ.
ಇದನ್ನೂ ಓದಿ : ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ವಾರ್ನ್..!
3. ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಗುಂಟೆ ಮತ್ತು ಸೆಂಟ್ಸ್ನಲ್ಲಿರುವ ವಿಸ್ತೀರ್ಣವನ್ನು ಚ.ಮೀ ನಲ್ಲಿ ಪರಿವರ್ತಿಸಿ, ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
4. ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಋಣಭಾರ ಪ್ರಮಾಣಪತ್ರ (ಇಸಿ)ಗಳನ್ನು ಸಲ್ಲಿಸಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.
5. ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಸೇವ್ ಮಾಡಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.
6. ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಇ-ಖಾತಾಗಳನ್ನು ಡನ್ಲೋಡ್ ಮಾಡಿಕೊಳ್ಳಲು ಇದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

7. ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಸಲ್ಲಿಸುವಾಗ ಎಲ್ಲಾ ವಿದ್ಯುತ್ ಸರಬರಾಜು ಕಂಪನಿ ಗಳೊಂದಿಗೆ ಮಾಡಲಾಗಿದ್ದ ಸಂಯೋಜನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.
8. ಇ-ಸ್ವತ್ತು ತಂತ್ರಾಂಶದ ಗ್ರಾಮ ಪಂಚಾಯತಿ ಬಳಕೆದಾರರುಗಳ ಲಾಗಿನ್ ನಲ್ಲಿ ಅರ್ಜಿಗಳ ಅನುಮೋದನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.
ಇನ್ನೂ ಹೊಸದಾಗಿ ಅನುಮೋದನೆಗೊಂಡ ಆಸ್ತಿಗಳಿಗೆ ತಿದ್ದುಪಡಿ ಮಾಡುವ ಅವಕಾಶವನ್ನು ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರವನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ಸಂಯೋಜನೆ ಮಾಡುವ ಕಾರ್ಯವನ್ನು ಮುಂದಿನ ದಿನದೊಳಗೆ ಕ್ರಮವಹಿಸಲಾಗುವುದು. ಇ-ಸ್ವತ್ತು ತಂತ್ರಾಂಶದ ಬಳಕೆದಾರರು ಗಳ ಲಾಗಿನ್ ನಲ್ಲಿ ಉಂಟಾಗುತ್ತಿರುವ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ರಣ್ದೀಪ್ ಭಾಗವಹಿಸಿದ್ದರು
ಜಿಲ್ಲಾ ಸಹಾಯವಾಣಿಗಳ ಸಂಖ್ಯೆಯನ್ನು ಮುಂದಿನ ಲಿಂಕ್ನಲ್ಲಿ ʼಸಂಪರ್ಕಿಸಿʼ ಶೀರ್ಷಿಕೆಯಡಿ ಪ್ರಕಟಿಸಲಾಗಿದೆ https://eswathu.karnataka.gov.in/Login.aspx ಮತ್ತು https://panchatantra.karnataka.gov.in ಸಹಾಯವಾಣಿ : 9483476000






