ಬೆಂಗಳೂರು: ವಿಶ್ವದ ಅತಿಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು (Bangalore Traffic) ಎರಡನೇ ಸ್ಥಾನ ಪಡೆದಿದೆ. ವಾಹನ ದಟ್ಟಣೆ ಪಟ್ಟಿಯಲ್ಲಿ ಮೆಕ್ಸಿಕೊ ನಗರ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರು ಎರಡನೇ ಸ್ಥಾನದಲ್ಲಿದೆ ಎಂದು ‘ಟಾಮ್ಟಾಮ್’ ಸಂಸ್ಥೆ 2025ರ ಸಂಚಾರ ಸೂಚ್ಯಂಕ (Traffic Index) ವರದಿಯಲ್ಲಿ ತಿಳಿಸಿದೆ. ವರದಿ ಪ್ರಕಾರ, 2025ರಲ್ಲಿ ಬೆಂಗಳೂರಿನ ಸರಾಸರಿ ಸಂಚಾರ ದಟ್ಟಣೆ ಶೇ 74.4ಕ್ಕೆ ತಲುಪಿದೆ. 2024ರಲ್ಲಿ ಇದು ಶೇ 72.7 ಆಗಿದ್ದು, ಒಂದೇ ವರ್ಷದಲ್ಲಿ ಶೇ 1.7ರಷ್ಟು ದಟ್ಟಣೆ ಹೆಚ್ಚಾಗಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ದಿನನಿತ್ಯದ ಟ್ರಾಫಿಕ್ ಕಿರಿಕಿರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಗರ ಸಂಚಾರಿ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ, ಪಾದಚಾರಿಗಳ ಅಪಘಾತಗಳು ಹಾಗೂ ಮಳೆಗಾಲದ ನೀರು ನಿಲ್ಲುವ ಸಮಸ್ಯೆಗಳಿಗೆ ಕಡಿವಾಣ ಹಾಕಲು ಸಂಚಾರಿ ವಿಭಾಗವು ಪಾಲಿಕೆಗೆ ಸಮಗ್ರ ಅಭಿವೃದ್ಧಿ ಪ್ರಸ್ತಾವನೆ ಸಲ್ಲಿಸಿದೆ.

ನಗರದ ವಿವಿಧ ಪ್ರಮುಖ ರಸ್ತೆ ಮತ್ತು ಜಂಕ್ಷನ್ಗಳಲ್ಲಿ ಸಂಚಾರ ಸುಗಮಗೊಳಿಸುವ ಉದ್ದೇಶದಿಂದ ಒಟ್ಟು 101 ಸ್ಥಳಗಳಲ್ಲಿ ಪಾದಚಾರಿ ಮೇಲ್ಸೇತುವೆ (ಸ್ಕೈವಾಕ್) ನಿರ್ಮಾಣ ಸೇರಿದಂತೆ ಹಲವಾರು ಸುಧಾರಣಾ ಕ್ರಮಗಳನ್ನು ಸಂಚಾರಿ ಪೊಲೀಸರು ಶಿಫಾರಸು ಮಾಡಿದ್ದಾರೆ. ಈ ಪ್ರಸ್ತಾವನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಪಾಲಿಕೆ, ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ ಸಾಧ್ಯವಿರುವ ಪ್ರದೇಶಗಳಲ್ಲಿ ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ನಗರದ ಪ್ರಮುಖ ಜಂಕ್ಷನ್ಗಳಲ್ಲಿ ರಸ್ತೆ ದಾಟುವಾಗ ಪಾದಚಾರಿಗಳಿಗೆ ಆಗುವ ಅಪಘಾತಗಳನ್ನು ತಡೆಗಟ್ಟಲು ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ 101 ಆಯ್ದ ಸ್ಥಳಗಳಲ್ಲಿ ಸ್ಕೈವಾಕ್ ನಿರ್ಮಿಸಲು ಹಾಗ ಟ್ರಾಫಿಕ್ ಜಾಮ್ಗೆ ಕಾರಣವಾಗುತ್ತಿರುವ 103 ಬಸ್ ನಿಲ್ದಾಣಗಳನ್ನು ಸೂಕ್ತ ಹಾಗೂ ವೈಜ್ಞಾನಿಕ ಸ್ಥಳಗಳಿಗೆ ಸ್ಥಳಾಂತರಿಸಲು ಶಿಫಾರಸು ಮಾಡಲಾಗಿದೆ.

ಮಳೆಗಾಲದಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟುಮಾಡುವ 137 ನೀರು ನಿಲ್ಲುವ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅಲ್ಲಿನ ಚರಂಡಿ ಹಾಗೂ ಮಳೆ ನೀರು ಹರಿವು ವ್ಯವಸ್ಥೆ ಸುಧಾರಣೆಗೆ ಸಲಹೆ ನೀಡಲಾಗಿದೆ. ಸಂಚಾರ ವೇಗಕ್ಕೆ ಅಡ್ಡಿಯಾಗುತ್ತಿರುವ ಹಾಗೂ ಅಪಘಾತಗಳಿಗೆ ಕಾರಣವಾಗುವ 84 ಸ್ಪೀಡ್ ಬ್ರೇಕರ್ಗಳನ್ನು ತೆಗೆದುಹಾಕಲು ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನೂ ಓದಿ: DARSHAN: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?
ರಸ್ತೆಯ ಮಧ್ಯದಲ್ಲೇ ಬಸ್ ನಿಲ್ಲುವುದರಿಂದ ಉಂಟಾಗುವ ದಟ್ಟಣೆ ತಪ್ಪಿಸಲು 63 ಪ್ರಮುಖ ಪ್ರದೇಶಗಳಲ್ಲಿ ಪ್ರತ್ಯೇಕ ಬಸ್ ಬೇ ನಿರ್ಮಾಣಕ್ಕೆ ಶಿಫಾರಸು ಮಾಡಲಾಗಿದೆ. ಅಲ್ಲದೇ ಅತಿ ಹೆಚ್ಚು ವಾಹನ ಸಂಚಾರ ಇರುವ 35 ರಸ್ತೆಗಳನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸುವ ಯೋಜನೆಯೂ ಪಟ್ಟಿಯಲ್ಲಿ ಸೇರಿದೆ ಎನ್ನಲಾಗಿದೆ.

ಸಂಚಾರಿ ಪೊಲೀಸ್ ಇಲಾಖೆ ನೀಡಿರುವ ಈ ಪ್ರಸ್ತಾವನೆಗಳ ಆಧಾರದ ಮೇಲೆ ಪಾಲಿಕೆ ಅಧಿಕಾರಿಗಳು ಹಾಗೂ ಇಂಜಿನಿಯರ್ಗಳು ಜಂಟಿ ಸ್ಥಳ ಪರಿಶೀಲನೆ ನಡೆಸಲಿದ್ದು, ಬಳಿಕ ಯೋಜನೆಗಳಿಗೆ ತ್ವರಿತವಾಗಿ ಟೆಂಡರ್ ಪ್ರಕ್ರಿಯೆ ಆರಂಭಿಸಿ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಈ ಕ್ರಮಗಳು ಜಾರಿಯಾದಲ್ಲಿ, ಮುಂಬರುವ ದಿನಗಳಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಗಣನೀಯವಾಗಿ ಕಡಿಮೆಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.






