ಬೆಂಗಳೂರು: ಇಂದು ರಾಜ್ಯ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರು ಆರು ಪ್ರಮುಖ ಬಹಿರಂಗ ಪ್ರಶ್ನೆಗಳನ್ನು ಕೇಳಿದ್ದಾರೆ.
ಭಾರತೀಯ ಜನತಾ ಪಕ್ಷ ಕರ್ನಾಟಕದ ಉದ್ದಗಲಕ್ಕೂ “ಬಿಜೆಪಿಯೇ ಭರವಸೆ” ಅನ್ನೋ ಅಭಿಯಾನ ನಡೆಸುತ್ತಿದ್ದು 40% ಸರ್ಕಾರ ತನ್ನ ಅಕ್ರಮ ಗಳಿಕೆಯ ಹಣದಲ್ಲಿ ಎಲ್ಲಾ ರಸ್ತೆಗಳ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸುವ ಮೂಲಕ ಚುನಾವಣೆಗೆ ಮುಂದಾಗಿದೆ ಎಂದು ರಣದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ.
ಕಳೆದ ಬಾರಿ ನಿಮ್ಮ ನೇತೃತ್ವದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟ 600 ಭರವಸೆಗಳ ಪೈಕಿ ಶೇ 10% ಭರವಸೆಗಳನ್ನೂ ನಿಮ್ಮ ಪಕ್ಷದ ಸರಕಾರದಿಂದ ಪೂರೈಸಲಾಗಿಲ್ಲ. ಈ ಬಗ್ಗೆ ಸರ್ಕಾರದ ಹಣದಲ್ಲಿ ನೀವು ನಡೆಸುತ್ತಿರುವ ಪ್ರಚಾರ ಸಭೆಯಲ್ಲಿಯಾದರೂ ಜನರಿಗೆ ಉತ್ತರದಾಯಿ ಆಗಬಲ್ಲಿರಾ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ “ರೋಡ್ ಷೋ(ಕಿ)” ಗಾಗಿ ಇಂದು ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆಯನ್ನು ಬೆಳಗಾವಿಯಲ್ಲಿ ರದ್ದು ಮಾಡಲಾಗಿದೆ. ಈ ಬಗ್ಗೆ ನೀವು ಉತ್ತರಿಸುವಿರಾ? ಅಲ್ಲದೇ ಕರ್ನಾಟಕದ 13,000 ಅನುದಾನ ರಹಿತ ಶಾಲೆಗಳ ಒಕ್ಕೂಟವಾದ ‘RUPSA’, ರಾಜ್ಯದ ಬಿಜೆಪಿ ಸರ್ಕಾರದಲ್ಲಿ 40% ಲಂಚ ನೀಡದೆ ಯಾವುದೇ ಸೇವೆ ಪಡೆಯಲು ಸಾಧ್ಯವಿಲ್ಲ ಎಂದು ತಮಗೆ ಪತ್ರ ಬರೆದು ಆರೋಪ ಮಾಡಿದ್ದರು. ಇದಕ್ಕೆ ತಾವು ಉತ್ತರವೇ ಕೊಟ್ಟಿಲ್ಲ ಯಾಕೆ? “ಪರೀಕ್ಷೆ ಪೇ ಚರ್ಚೆ” ನಡೆಸುವ ತಾವು “ಶಿಕ್ಷಣದ ಬಗ್ಗೆ ಚರ್ಚೆಗೆ” ಯಾವಾಗ ಬರ್ತೀರಾ? ಎಂದು ಕೇಳಿದ್ದಾರೆ.
ಇಡೀ ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ಯುವಜನರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿರುತ್ತದೆ. ನೇಮಕಾತಿ ನಡೆಸುತ್ತಿರುವ ಹುದ್ದೆಗಳ ಹಂಚಿಕೆಯಲ್ಲೂ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ನಿಮ್ಮ ಬಿಜೆಪಿ ಶಾಸಕರು & ಮಂತ್ರಿಗಳು ಸರ್ಕಾರದ ಹುದ್ದೆಗಳನ್ನು ಲಕ್ಷ-ಕೋಟಿಗಟ್ಟಲೆ ಹಣಕ್ಕೆ ಮಾರಾಟಕ್ಕೆ ಇಟ್ಟುಬಿಟ್ಟಿದ್ದಾರೆ! ನಿಮ್ಮದೇ ಪಕ್ಷದ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಶಾಸಕರೊಬ್ಬರು ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳ ಪುತ್ರ ಪಿಎಸ್’ಐ ನೇಮಕಾತಿ ಹಗರಣದ ನೇರ ರೂವಾರಿ ಎಂದು ಆರೋಪಿಸಿದ್ದರು. ಅದರ ಬಗ್ಗೆನೂ ನಿಮ್ಮ ಭಾಷಣಕಾರರಿಗೆ ಹೇಳಿ ಒಂದು ಉತ್ತರ ಬರೆಸಿ, ಅದನ್ನು ಓದಿ ಹೇಳಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಶಿವಮೊಗ್ಗದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆ ಲಕ್ಷಾಂತರ ಜನರ ಪಾಲಿಗೆ ಉದ್ಯೋಗ ಒದಗಿಸಿದ್ದ ದೇಶದ ಮಹತ್ತರ ಕಾರ್ಖಾನೆಯಾಗಿತ್ತು. ಈ ಕಾರ್ಖಾನೆಗೆ ಯುಪಿಎ ಸರಕಾರ 2013ರಲ್ಲಿಯೇ ಬಳ್ಳಾರಿಯಲ್ಲಿ 380 ಎಕರೆ ಗಣಿ ಪ್ರದೇಶವನ್ನು ಒದಗಿಸಿತ್ತು. ಆದರೆ ನಿಮ್ಮ ಸರ್ಕಾರ ಆ ಗಣಿ ಪ್ರದೇಶದ ಉಪಯೋಗವನ್ನೇ ಮಾಡದೇ, ಈಗ ಈ ಕಾರ್ಖಾನೆಗೆ ಶಾಶ್ವತವಾಗಿ ಬೀಗ ಹಾಕಿದ್ದು ಯಾಕೆ ಎಂದು ಉತ್ತರಿಸುವಂತೆ ಒತ್ತಾಯಿಸಿದ್ದಾರೆ.
ಕಳೆದ ಚುನಾವಣೆಯ ವೇಳೆ ದೇಶದ ಗೃಹ ಮಂತ್ರಿ “ಅಮಿತ್ ಶಾ” ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಶಿವಮೊಗ್ಗ ಜಿಲ್ಲೆಯಲ್ಲಿ 500 ಕೋಟಿ ವೆಚ್ಚದ ಅಡಿಕೆ ಸಂಶೋಧನಾ ಕೇಂದ್ರ ರಚಿಸುವುದಾಗಿ ಭರವಸೆ ನೀಡಿದ್ದರು. ಆದರೆ ಈವರೆಗೂ ಅದಕ್ಕೆ ೫ ಪೈಸೆ ಸಹ ನೀಡಿಲ್ಲ. ಆತ್ಮನಿರ್ಭರ್ ಭಾರತದ ಹೆಸರಲ್ಲಿ ಪ್ರಚಾರ ಪಡೆಯುವ ತಾವು ನಮ್ಮ ದೇಶದಲ್ಲಿ ಬೆಳೆಸುವ ಉತ್ಕೃಷ್ಟ ದರ್ಜೆಯ ಅಡಿಕೆಗೆ ಪ್ರೋತ್ಸಾಹ ನೀಡದೇ, ಹೊರ ದೇಶದಿಂದ ಅಮದಾಗುವ ಅಡಿಕೆ ಮೇಲಿದ್ದ ಆಮದು ಸುಂಕವನ್ನು 110% ನಿಂದ ಕೇವಲ 10% ಇಳಿಸಿ ದೇಶೀ ಅಡಿಕೆಯ ಮಾರುಕಟ್ಟೆಯನ್ನು ಭಸ್ಮ ಮಾಡಿದ್ದು ಏಕೆ? ಇಡೀ ಮಲೆನಾಡು ಪ್ರದೇಶದಲ್ಲಿ ಅಡಿಕೆ ಎಲೆ ಚುಕ್ಕೆ ರೋಗಕ್ಕೆ ತುತ್ತಾಗಿದ್ದು, ನಿಮ್ಮ ಡಬಲ್ ಇಂಜಿನ್ ಸರ್ಕಾರ ಔಷದ ಕಂಡು ಹಿಡಿಯಲು ಕ್ರಮ ಕೈಗೊಳ್ಳಲು ಏಕೆ ಮುಂದಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
“ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ – ಇಲ್ಲಿ ಯಾರೂ ಅನಾವಶ್ಯಕವಾಗಿ ಹಾಗೂ ಉದ್ದೇಶಪೂರ್ವಕವಾಗಿ ಗಡಿ ವಿಚಾರದಲ್ಲಿ ರಾಜಕೀಯ ಮಾಡಬಾರದು” ಎಂದು ನೀವು ಇಂದು ಘೋಷಿಸಿ, ಮಹಾರಾಷ್ಟ್ರದ ಬಿಜೆಪಿ ಶಾಸಕರಿಗೆ ಪಾಠ ಹೇಳಬಲ್ಲಿರಾ? ಎಂದು ಕೇಳಿದ್ದಾರೆ.
ಚುನಾವಣಾ ಸಮಯದಲ್ಲಿ ಕರ್ನಾಟಕದ ಸ್ಥಳೀಯ ನಾಯಕತ್ವದ ಕೊರತೆ ಮತ್ತು ವೈಫಲ್ಯವನ್ನು ಮನಗಂಡಿರುವ ಪ್ರಧಾನಿ ನರೇಂದ್ರ ಮೋದಿರವರು, ಪದೇ ಪದೇ ಕರ್ನಾಟಕಕ್ಕೆ ಭೇಟಿ ನೀಡಿ ಸುಳ್ಳು ಮಾಹಿತಿಗಳ ಮುಖಾಂತರ ಜನಸಾಮಾನ್ಯರ ಭಾವನೆಗಳ ಜೊತೆ ಆಟವಾಡುತ್ತಿದ್ದಾರೆ. ಇಲ್ಲಿಯವರೆಗೆ ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳಿಗೆ, ಭ್ರಷ್ಟಾಚಾರಗಳಿಗೆ, ಆಡಳಿತ ಯಂತ್ರದ ಕುಸಿತಕ್ಕೆ, ಉದ್ಯೋಗದ ಸಮಸ್ಯೆಗೆ, ಬೆಲೆ ಏರಿಕೆಗೆ ಮತ್ತು ಹಗರಣಗಳ ಕುರಿತ ಜನರ ಪ್ರಶ್ನೆಗಳಿಗೆ ಉತ್ತರಿಸದೆ ಪಲಾಯನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಈ ಎಲ್ಲಾ ಪ್ರಶ್ನೆಗಳಿಗೆ ಪ್ರಧಾನ ಮಂತ್ರಿಯವರು ಉತ್ತರಿಸಲೇಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.