ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಕರ್ನಾಟಕದಲ್ಲಿ (Karnataka) ಹಲವು ಕ್ಷೇತ್ರಗಳು ಭಾರೀ ಸದ್ದು ಮಾಡಿದ್ದವು.
ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ ರಾಜ್ಯದಲ್ಲಿ ಹೈವೋಲ್ಟೇಜ್ ಕ್ಷೇತ್ರಗಳೇ ಎಂದು ಹೇಳಬಹುದು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಾಲಿ ಸಂಸದ ಡಿಕೆ ಸುರೇಶ್, ಮಂಡ್ಯದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಪೆನ್ ಡ್ರೈವ್ ಪ್ರಕರಣದಿಂದಾಗಿ ಸದ್ದು ಮಾಡುತ್ತಿರುವ ಪ್ರಜ್ವಲೇ ರೇವಣ್ಣ ಪ್ರತಿನಿಧಿಸುತ್ತಿದ್ದ ಹಾಸನ ಕ್ಷೇತ್ರಳು ಹೈ ವೋಲ್ಟೇಜ್ ಕ್ಷೇತ್ರಗಳಾಗಿವೆ. ಈಗ ಕ್ಷೇತ್ರಗಳಲ್ಲಿ ಯಾರು ಗೆಲ್ಲುತ್ತಾರೆ ಎಂಬುವುದು ಇಡೀ ರಾಜ್ಯದ ಜನರ ಚರ್ಚೆಯಾಗಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಈ ಬಾರಿ ಜಿದ್ದಾಜಿದ್ದಿನ ಕಣವಾಗಿ ಇಡೀ ರಾಜ್ಯದ ಗಮನ ಸೆಳೆದಿದೆ. ಜಯದೇವ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಲಕ್ಷಾಂತರ ಜನರ ಹೃದಯ ಗೆದ್ದಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರು ಹಾಲಿ ಸಂಸದ ಡಿಕೆ ಸುರೇಶ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಎರಡು ಬಾರಿ ಸಂಸದರಾಗಿರುವ ಡಿ.ಕೆ.ಸುರೇಶ್ ಹ್ಯಾಟ್ರಿಕ್ ಗೆಲುವು ಸಾಧಿಸುವ ಕನಸಿನಲ್ಲಿದ್ದಾರೆ. ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಕೂಡ ಮಂಜುನಾಥ್ ಅವರ ಗೆಲುವಿಗೆ ಹರಕೆ ಹೊತ್ತಿದ್ದಾರೆ ಎನ್ನಲಾಗುತ್ತಿದ್ದು, ಈ ಮಧ್ಯೆ ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಮೂಡಿದೆ.
2019ರಿಂದಲೂ ಮಂಡ್ಯ ಲೋಕಸಭಾ ಕ್ಷೇತ್ರ ಸುಮಲತಾ ಸ್ಪರ್ಧೆ ಕಾರಣಕ್ಕೆ ರಾಷ್ಟ್ರಮಟ್ಟದಲ್ಲೂ ಗಮನ ಸೆಳೆಯುತ್ತಲೇ ಇದೆ. ಅಂದು ಕಾಂಗ್ರೆಸ್ ಜೆಡಿಎಸ್ ಗೆ ಸೆಡ್ಡು ಹೊಡೆದು ಸುಮಲತಾ ಅಂಬರೀಶ್ ಅವರು ಸ್ವಾಭಿಮಾನದ ಪಣದೊಂದಿಗೆ ಗೆದ್ದು ಸಂಸತ್ ಪ್ರವೇಶಿಸಿದ್ದರು. ಕುಮಾರಸ್ವಾಮಿ ಪುತ್ರ ನಿಖಿಲ್ ಸುಮಲತಾ ವಿರುದ್ಧ ಸೋತಿದ್ದರು. ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಕಣದಲ್ಲಿದ್ದು, ಯಾರು ಗೆಲ್ಲುತ್ತಾರೆ ಎಂಬುವುದನ್ನು ನೋಡಬೇಕಿದೆ.
ಅಶ್ಲೀಲ ಪೆನ್ಡ್ರೈವ್ ವೈರಲ್ ಹಾಗೂ ಹಾಲಿ ಸಂಸದನ ವಿರುದ್ಧದ ಅತ್ಯಾಚಾರ ಪ್ರಕರಣದಿಂದ ದೇಶದಲ್ಲಿ ಸುದ್ದಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದಲ್ಲಿಯೂ ಫೈಟ್ ಜೋರಾಗಿದೆ. ಜೆಡಿಎಸ್ ಬಿಜೆಪಿ ಮೈತ್ರಿಕೂಟದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ ಶ್ರೇಯಸ್ ಪಟೇಲ್ ಅಖಾಡದಲ್ಲಿದ್ದಾರೆ.