ಕಾಂಗ್ರೆಸ್ ಬಹುತೇಕ ಎಲ್ಲ ಸಮುದಾಯಗಳ ನಾಯಕರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿದೆ. ಹಾಗಾಗಿ ದಲಿತ ಸಮುದಾಯದ ನಾಯಕರು ಮುಖ್ಯಮಂತ್ರಿ ಯಾಕಾಗಬಾರದು? ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮಂಗಳವಾರ ಪ್ರಶ್ನಿಸಿದ್ದಾರೆ.
ಮೈಸೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕಾಂಗ್ರೆಸ್ 136ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಆಂತರಿಕ ಸಮೀಕ್ಷೆಯೂ ಬಹುಮತ ಪಡೆಯಲಿದೆ ಎಂದು ಹೇಳಿದೆ. ವೀರಪ್ಪ ಮೊಯ್ಲಿ, ಗುಂಡೂರಾವ್, ಬಂಗಾರಪ್ಪ, ದೇವರಾಜ್ ಅರಸು, ಸಿದ್ದರಾಮಯ್ಯ ಈ ಎಲ್ಲರೂ ಮುಖ್ಯಮಂತ್ರಿಗಳಾಗಿದ್ದಾರೆ. ದಲಿತ ಸಮುದಾಯದ ನಾಯಕರು ಮುಖ್ಯಮಂತ್ರಿ ಯಾಕಾಗಬಾರದು? ಎಂದು ಹೇಳಿದ್ದಾರೆ.
ರಾಜ್ಯ ಬಿಜೆಪಿ ಸರಕಾರ ‘ದಪ್ಪ ಚರ್ಮ’ ಹೊಂದಿರುವ ಅತ್ಯಂತ ಭ್ರಷ್ಟ ಸರಕಾರ. ನಿರಂತರ ಹಗರಣ, ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದಾರೆ, ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯ ಬಹುತೇಕ ಎಲ್ಲ ಅಂಶಗಳನ್ನು ಈಡೇರಿಸಿತ್ತು, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಶೇ.40 ರಷ್ಟು ಈಡೇರಿಸಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಿಜೆಪಿಯ ಎಲ್ಲಾ ಹಗರಣಗಳ ತನಿಖೆ ನಡೆಸಲಿದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಜನ್ಮದಿನಾಚರಣೆ ಕುರಿತು ಮಾತನಾಡಿದ ಅವರು, “ವ್ಯಕ್ತಿಯ ಜೀವನದಲ್ಲಿ ಹಲವು ಮೈಲಿಗಲ್ಲುಗಳಿವೆ, ಸಿದ್ದರಾಮಯ್ಯನವರ ಅಭಿಮಾನಿಗಳು ಸಿದ್ದರಾಮಯ್ಯ ಅವರ 75 ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ, ನಾನು ಮತ್ತು ರಾಹುಲ್ ಗಾಂಧಿ ಇಬ್ಬರೂ ಉತ್ಸವದಲ್ಲಿ ಭಾಗವಹಿಸುತ್ತೇವೆ, ನಮ್ಮಲ್ಲಿ ಯಾವುದೇ ಬಣಗಳಿಲ್ಲ, ನಾವು ಕಾಂಗ್ರೆಸ್ ಬಣ.” ಎಂದು ಹೇಳಿದ್ದಾರೆ.