ಕೃಷ್ಣಮಣಿ
ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನಕ್ಕೆ ಕರ್ನಾಟಕದ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿದೆ ಕೇಂದ್ರ ಸರ್ಕಾರ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ. ಕೇಂದ್ರ ಸರ್ಕಾರವು ನಾಡಿನ 7 ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿತ್ತು. ಕಳೆದ ಬಾರಿ ವಿವಾದದ ಸ್ವರೂಪ ಪಡೆದುಕೊಂಡ ಬಳಿಕ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಹಳೇ ಚಾಳಿಯನ್ನು ಕೇಂದ್ರ ಸರ್ಕಾರ ಮುಂದುವರಿಸಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಮೈಸೂರಿನ ನಾಲ್ವಡಿ ಒಡೆಯರ್ ಅವರನ್ನು ತಿರಸ್ಕರಿಸಿದ್ಯಾಕೆ..?
ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ತಬ್ಧಚಿತ್ರ, ರಾಜಧಾನಿ ಬೆಂಗಳೂರಿನ ಗ್ರಾಮದೇವತೆ, ಸುಮಾರು 10ನೇ ಶತಮಾನದಲ್ಲಿ ನಿರ್ಮಿಸಿಲ್ಪಟ್ಟ ಅಣ್ಣಮ್ಮದೇವಿಯ ದೇವಸ್ಥಾನದ ಸ್ತಬ್ಧಚಿತ್ರ ಒಳಗೊಂಡಂತೆ ಸುಮಾರು 4 ಸ್ತಬ್ಧಚಿತ್ರ ಮಾದರಿಗಳನ್ನು ನಿರ್ಮಿಸಿ ಕೇಂದ್ರ ಸರ್ಕಾರಕ್ಕೆ ಅವಕಾಶ ಕೋರಿ ಮನವಿ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರದ ಆಯ್ಕೆ ಸಮಿತಿ ನಮ್ಮ ಸರ್ಕಾರ ಮನವಿಯನ್ನು ತಿರಸ್ಕರಿಸಿದೆ. ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಈ ಮೂಲಕ ಕಸಿದುಕೊಂಡಿದೆ ಎಂದು ಕಿಡಿಕಾರಿದ್ದಾರೆ.
![](https://pratidhvani.com/wp-content/uploads/2024/01/INC-v-BJP.png)
ಕಾಂಗ್ರೆಸ್ ಸರ್ಕಾರ ಎಂದು ಅವಕಾಶ ನಿರಾಕರಣೆ..!
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ ಎಂದಿದ್ದಾರೆ ಸಿದ್ದರಾಮಯ್ಯ. ತನ್ನ ತೆರಿಗೆ ಪಾಲಿನಲ್ಲಿ ವಂಚನೆ ಮಾಡುತ್ತಿದ್ದಾರೆ. ಬರ ಪರಿಹಾರದಲ್ಲೂ ಅನ್ಯಾಯ ಆಗ್ತಿದೆ. ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ sಏರಿದಂತೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ ಎಂದಿದ್ದಾರೆ ಸಿದ್ದರಾಮಯ್ಯ. ಕನ್ನಡ – ಕನ್ನಡಿಗರು ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿ ಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು ಎಂದು ಎಚ್ಚರಿಸಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಮತ್ತೊಂದು ಅವಕಾಶ ಕೊಟ್ಟ ಸಿಎಂ..!
ಕೇಂದ್ರ ಸರ್ಕಾರ ಆಗಿರುವ ತಪ್ಪನ್ನು ತಿದ್ದಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವಕಾಶ ಕೊಟ್ಟಿದ್ದಾರೆ. ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಳ್ಳಬೇಕು, ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಕರ್ನಾಟಕಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದಿದ್ದಾರೆ. ಈ ಮೂಲಕ ಈಗಾಗಲೇ ಕರ್ನಾಟಕದ ನಾಮಫಲಕಗಳಲ್ಲಿ ಶೇಕಡ 60 ರಷ್ಟು ಕನ್ನಡವನ್ನೇ ಬಳಸಬೇಕು ಎಂದು ಸುಗ್ರೀವಾಜ್ಞೆ ಮೂಲಕ ಕನ್ನಡಿಗರ ಮನ ಕದ್ದಿರುವ ಕಾಂಗ್ರೆಸ್ ಸರ್ಕಾರ, ಇದೀಗ ಕೇಂದ್ರ ಸರ್ಕಾರದ ವಿರುದ್ಧ ಕನ್ನಡ ಅಸ್ತ್ರವನ್ನು ಬಳಸಿದೆ. ಆದರೆ ಈ ಅಸ್ತ್ರಕ್ಕೆ ಕೇಂದ್ರದ ಮೋದಿ ಸರ್ಕಾರ ಬೆದರುತ್ತಾ..? ಅಥವಾ ಲೋಕಸಭಾ ಚುನಾವಣೆಯನ್ನು ಲೆಕ್ಕಕ್ಕೆ ಇಟ್ಟುಕೊಳ್ಳದೆ ತನ್ನ ನಿರ್ಧಾರವೇ ಅಂತಿಮ ಅನ್ನುತ್ತಾ ಕಾದು ನೋಡ್ಬೇಕು.