ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಹೋರಾಟವನ್ನು ಹಿಂಪಡೆಯುವುದಾಗಿ ಘೋಷಿಸಿದೆ. ಆದರೆ, ಈಗ ಹೊಸ ಪ್ರಶ್ನೆಯೊಂದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ—ಸಿಜೆಪಿ ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷವಾಗಿ ಹೊರಹೊಮ್ಮಲಿದೆಯೇ?

ಜೂನ್ 6ರಿಂದ ಆರಂಭವಾದ ಪ್ರತಿಭಟನೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪೊಲೀಸ್ ಲಾಠಿಚಾರ್ಜ್, ಜಲಫಿರಂಗಿ ಹಾಗೂ ಅಶ್ರುವಾಯು ಪ್ರಯೋಗದ ನಡುವೆಯೂ ಪ್ರತಿಭಟನಾಕಾರರು ಹೋರಾಟ ಮುಂದುವರಿಸಿದ್ದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂಬುದು ಪ್ರತಿಭಟನೆಯ ಪ್ರಮುಖ ಬೇಡಿಕೆಯಾಗಿತ್ತು.

ಈ ನಡುವೆ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಕೂಡ ವಿದ್ಯಾರ್ಥಿಗಳ ಪರ ಧ್ವನಿ ಎತ್ತಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿದ್ದವು.ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ ಸಿಜೆಪಿ ವಕ್ತಾರ ಸೌರವ್ ದಾಸ್, ಜಂತರ್ ಮಂತರ್ನಲ್ಲಿನ ಪ್ರತಿಭಟನೆಯನ್ನು ತಕ್ಷಣದಿಂದಲೇ ಅಂತ್ಯಗೊಳಿಸುವುದಾಗಿ ಘೋಷಿಸಿದರು. ಜೊತೆಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಶಾಂತಿಯುತವಾಗಿ ತಮ್ಮ ಮನೆಗಳಿಗೆ ಮರಳುವಂತೆ ಮನವಿ ಮಾಡಿದರು.ಆದರೆ ಪ್ರತಿಭಟನೆ ಅಂತ್ಯಗೊಂಡ ತಕ್ಷಣವೇ ಮತ್ತೊಂದು ಕುತೂಹಲದ ಚರ್ಚೆ ಆರಂಭವಾಗಿದೆ.

ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯ ಪಕ್ಷವಾಗಿ ರೂಪುಗೊಳ್ಳಲಿದೆಯೇ? ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳು ಮತ್ತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಜೆಪಿ ವಕ್ತಾರ ಅಶುತೋಷ್ ರಾಂಕಾ, “ನಮ್ಮ ಹೋರಾಟ ಸಂಪೂರ್ಣವಾಗಿ ವಿದ್ಯಾರ್ಥಿಗಳ ಹಿತಕ್ಕಾಗಿ. ದೇಶದ ವಿದ್ಯಾರ್ಥಿಗಳು ಪ್ರಜ್ಞಾವಂತರು. ಮುಂದೇನು ನಡೆಯಲಿದೆ ಎಂಬುದನ್ನು ಕಾಲವೇ ನಿರ್ಧರಿಸುತ್ತದೆ” ಎಂದು ಹೇಳಿದ್ದಾರೆ.
ಅವರ ಈ ಹೇಳಿಕೆ ಸಿಜೆಪಿ ಭವಿಷ್ಯದ ರಾಜಕೀಯ ನಡೆ ಬಗ್ಗೆ ಇನ್ನಷ್ಟು ಕುತೂಹಲ ಮೂಡಿಸಿದ್ದು, ವಿದ್ಯಾರ್ಥಿ ಚಳವಳಿಯಾಗಿ ಆರಂಭವಾದ ಈ ಸಂಘಟನೆ ಮುಂದಿನ ದಿನಗಳಲ್ಲಿ ರಾಜಕೀಯ ಅಂಗಳಕ್ಕೆ ಕಾಲಿಡುತ್ತದೆಯೇ ಎಂಬ ಪ್ರಶ್ನೆಗೆ ಕಾಲವೇ ಉತ್ತರ ನೀಡಬೇಕಿದೆ.





