ಹುಬ್ಬಳ್ಳಿ: ಪ್ರತಿಭಟನೆ ವೇಳೆ ಮಹಿಳೆ ವಿವಸ್ತ್ರ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ರಾಜಕೀಯ ಪಕ್ಷದ ಮಹಿಳಾ ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ಪೊಲೀಸ್ ಸಿಬ್ಬಂದಿ ಬಂಧಿಸುವ ವೇಳೆ ಆಕೆಯ ಬಟ್ಟೆ ಹರಿದ ವಿಡಿಯೋ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಮಹಿಳಾ ಆಯೋಗ ತಿಳಿಸಿದೆ.

ಆಯೋಗದ ಅಧ್ಯಕ್ಷೆ ವಿಜಯ ರಾಹತ್ಕರ್ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಘಟನೆಗಳು ಮಹಿಳೆಯ ಘನತೆ, ವೈಯಕ್ತಿಕ ಸ್ವಾತಂತ್ರ್ಯದ ಹಾಗೂ ಲಿಂಗಾಧಾರಿತ ಹಿಂಸೆ ವಿರುದ್ಧ ನೀಡಲಾದ ರಕ್ಷಣೆಯ ಉಲ್ಲಂಘನೆ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ FIR ದಾಖಲಿಸದಿದ್ದರೆ ಕೂಡಲೇ ದಾಖಲಿಸಿಕೊಳ್ಳಬೇಕು. ವಿಡಿಯೋ ಸಾಕ್ಷ್ಯಗಳ ಪರಿಶೀಲನೆ ಸೇರಿದಂತೆ ನ್ಯಾಯಯುತ, ನಿಷ್ಪಕ್ಷಪಾತ ಮತ್ತು ಕಾಲಮಿತಿಯ ತನಿಖೆಯನ್ನು ನಡೆಸಬೇಕು, ದುಷ್ಕೃತ್ಯ ಕಂಡುಬಂದಲ್ಲಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಇಲಾಖಾ ಮತ್ತು ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು. ಕಾನೂನಿನ ಪ್ರಕಾರ ಸಂತ್ರಸ್ತೆ ವೈದ್ಯಕೀಯ ನೆರವು, ಮಾನಸಿಕ ಬೆಂಬಲ, ಪುನರ್ವಸತಿ ಮತ್ತು ಪರಿಹಾರವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಡಿಜಿಪಿಗೆ ಪತ್ರ ಬರೆಯಲಾಗಿದೆ. ಇನ್ನು ಕ್ರಮ ತೆಗೆದುಕೊಂಡಿರುವ ಬಗ್ಗೆ ಐದು ದಿನದಲ್ಲಿ ವಿವರವಾದ ವರದಿ ನೀಡಬೇಕು ಎಂದು ಮಹಿಳಾ ಆಯೋಗ ಸೂಚಿಸಿದೆ






