ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಈಗ ಚುರುಕುಗೊಂಡಿದ್ದು ಮುಂದಿನ ಐದಾರು ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಐದು ದಿನ ಮುಂದುವರಿಯಲಿದೆ. ತುಮಕೂರು, ಬಳ್ಳಾರಿ ಹಾಗೂ ಕೋಲಾರ ಸೇರಿ ರಾಜ್ಯದ ಹಲವೆಡೆ ಗುರುವಾರ ಭರ್ಜರಿ ವರ್ಷಧಾರೆಯಾಗಿದೆ.
ಅರಬ್ಬಿ ಸಮುದ್ರದಲ್ಲಿ ಮುಂಗಾರು ಇನ್ನಷ್ಟು ಮುನ್ನಡೆಯಲು ಪೂರಕ ವಾತಾವರಣ ಉಂಟಾಗಿದೆ. ಇದರಿಂದಾಗಿ, ಈಗಾಗಲೇ ಮುಂಗಾರು ಚುರುಕುಗೊಂಡ ಪರಿಣಾಮ ರಾಜ್ಯಾದ್ಯಂತ ಬಿರುಸಾಗಿ ಮಳೆಯಾಗುತ್ತಿದೆ.ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ 23ರಿಂದ ಜೂ 27ರವರೆಗೆ, ಚಿಕ್ಕಮಗಳೂರು, ಬಳ್ಳಾರಿ, ಕೊಡಗು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಮೂನ್ಸೂಚನೆ ಕೊಟ್ಟಿದೆ. ಉತ್ತರ ಒಳನಾಡಿನಲ್ಲೂ ಮುಂದಿನ ಐದು ದಿನ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.