ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9ದಿನಗಳ ಕಾಲ ನಡೆಯಲಿರುವ ಯುವ ಸಂಭ್ರಮಕ್ಕೆ ಶುಕ್ರವಾರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ನಟ ಡಾಲಿ ಧನಂಜಯ್ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದ್ದಾರೆ
ಬಳಿಕ ಮಾತನಾಡಿದ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೋವಿಡ್ ಅಲೆಯು ಗಣನೀಯವಾಗಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದ ರಾಜ್ಯ ಸರ್ಕಾರ ಮಾಡಲು ತೀರ್ಮಾನ ಮಾಡಿದ್ದರಿಂದ ಈ ಬಾರಿಯ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ ಎಂದರು.
ಯುವ ಸಂಭ್ರಮಕ್ಕೆ 100ಕ್ಕೂ ಹೆಚ್ಚಿನ ಕಾಲೇಜುಗಳ ವಿದ್ಯಾರ್ಥಿಗಳು ಬಂದಿದ್ದು, ಸಂತೋಷದಿಂದ ಭಾಗವಹಿಸಿ ಪ್ರತಿಭೆಯನ್ನು ತೋರಿಸಿಕೊಳ್ಳಲು ಸುವರ್ಣ ಅವಕಾಶ. ಹೀಗಾಗಿ ಇಂತಹ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಕಾರ್ಯಕ್ರಮದ ಕೇಂದ್ರಬಿಂದುವಾದ ಡಾಲಿ ಧನಂಜಯ್ ಅವರು ಮಾತನಾಡಿ, ಇಂತಹ ಹಬ್ಬಗಳು ಪ್ರತಿನಿತ್ಯ ಇರಬೇಕು. ಹಬ್ಬಗಳನ್ನು ಜಾತಿ, ಮತ ಮರೆತು ಪ್ರತಿಯೊಬ್ಭರು ಆಚರಿಸಬೇಕು. ಹಬ್ಬಗಳಲ್ಲಿ ಗಲಾಟೆ ಇರಬಾರದು. ನಮ್ಮ ಗುರಿ ಮುಟ್ಟಿ ಸಾಧನೆ ಮಾಡಿದಾಗ ಇಂತಹ ಹಬ್ಬಕ್ಕೆ ಇನ್ನಷ್ಟು ಮೆರಗು ಬರುತ್ತದೆ. ಸಾಧನೆ ಮಾಡಲು ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ಯಾವುದೆ ಕಾರಣಕ್ಕೆ ಹಿಂದೆ ಸರಿಯಬಾರದು ಎಂದು ಕಿವಿಮಾತು ಹೇಳಿದ್ದಾರೆ.
ನಾನು ಇದೇ ಗಂಗೋತ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ದಸರಾ ಇಲ್ಲೆಯೇ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ನಾನೂ ಸಹ ಕಾರ್ಯಕ್ರಮಕ್ಕೆ ಬಂದು ಕುಣಿದಾಡಿದ ನೆನಪುಗಳು ಈಗಲೂ ಸಹ ನೆನಪಿಗೆ ಬರುತ್ತದೆ. ನಮ್ಮ ಮನಸ್ಥಿತಿಯನ್ನು ನಾವೆ ನಿಯಂತ್ರಣ ಮಾಡಿಕೊಳ್ಳಬೇಕು. ಸ್ವಾತಂತ್ರ್ಯವಾಗಿ ಆಲೋಚನೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದಿದ್ದಾರೆ.
ನಟ ಡಾಲಿ ಧನಂಜಯ್ ವೇದಿಕೆಯತ್ತ ಬರುತ್ತಿದ್ದಂತೆ ಅಭಿಮಾನಿಗಳು ನಟ ಧನಂಜಯ್ ಅವರತ್ತ ಕೈ ಬಿಸಿ ಡಾಲಿ ಧನಂಜಯ್ ಅವರನ್ನು ಬರಮಾಡಿಕೊಂಡರು. ಬಳಿ ಧನಂಜಯ್ ಅವರು ಅಭಿಮಾನಿಗಳ ಆಸೆಯಂತೆ ಟಗರು, ಬಡವರಾಸ್ಕಲ್, ಮಾನ್ಸೂನ್ ರಾಗ ಚಿತ್ರದ ಡೈಲಾಗ್ ಹೊಡೆದು ಅಭಿಮಾನಿಗಳನ್ನು ರಂಜಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸು, ಮೈಲ್ಯಾಕ್ ಅಧ್ಯಕ್ಷ ಆತ್.ರಘು ಕೌಟಿಲ್ಯ, ಉಪ ಮೇಯರ್ ಜಿ.ರೂಪಾ, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹದೇವಯ್ಯ, ಪಾಲಿಕೆ ನಾಮನಿರ್ದೇಶಿತ ಸದಸ್ಯ ರಮೇಶ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಯುವ ಸಂಭ್ರಮ ಸಮಿತಿ ಕಾರ್ಯಾಧ್ಯಕ್ಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.